ಏಪ್ರಿಲಲ್ಲಿ ₹8000 ಕೋಟಿ ಅನುದಾನ ಬಿಡುಗಡೆ – ಸಿಎಂ ಭರವಸೆ

ಬೆಂಗಳೂರು : ಮುಖ್ಯಮಂತ್ರಿ ವಿವೇಚನಾ ಕೋಟಾದಲ್ಲಿ ಲಭ್ಯವಿರುವ 8000 ಕೋಟಿ ರು. ಅನುದಾನದಿಂದ ಏಪ್ರಿಲ್ ಬಳಿಕ ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಅನುದಾನ ನೀಡುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಶಾಸಕರಿಗೂ ಭರವಸೆ ನೀಡಿದ್ದಾರೆ.
ನಗರದಲ್ಲಿ ಸೋಮವಾರ ನಡೆದ ಸಿಎಲ್ಪಿ ಸಭೆಯಲ್ಲಿ, ಮುಖ್ಯಮಂತ್ರಿಗಳ ಅಭಿವೃದ್ಧಿ ನಿಧಿಯಲ್ಲಿ 8000 ಕೋಟಿ ರು. ಇದೆ. ಬಜೆಟ್ ನಲ್ಲಿ ಎಲ್ಲವನ್ನೂ ಬರೆಯಲು ಸಾಧ್ಯವಿಲ್ಲ. ಆದ್ದರಿಂದ ಬಜೆಟ್ನಲ್ಲಿ ತಮ್ಮ ಕ್ಷೇತ್ರದ ಹೆಸರು ಉಲ್ಲೇಖ ಆಗಿಲ್ಲ ಎಂದು ಯಾರೂ ಧೈರ್ಯಗುಂದುವ ಅಗತ್ಯ ಇಲ್ಲ. ಏಪ್ರಿಲ್ ಬಳಿಕ ಈ ಅನುದಾನವನ್ನು ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಗಳಿಗೆ ಅಗತ್ಯಕ್ಕೆ ಅನುಸಾರ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.
ಇದೇ ವೇಳೆ, ನಮ್ಮ ಬಜೆಟ್ ಬಗ್ಗೆ ಬಿಜೆಪಿಯವರು ಹೆಚ್ಚು ಸಾಲ ಮಾಡಲಾಗಿದೆ, ಮುಸ್ಲಿಮರನ್ನು ಓಲೈಸಲಾಗಿದೆ ಎಂದು ಬುರುಡೆ ಬಿಡುತ್ತಿದ್ದಾರೆ. ಇದು ಪರಮ ಸುಳ್ಳು.
ಎಂದು ನೀವು ಅಂಕಿ-ಅಂಶಗಳನ್ನಿಟ್ಟುಕೊಂಡು ಗಟ್ಟಿ ದನಿಯಲ್ಲಿ ಅವರ ಆರೋಪಗಳಿಗೆ ಸದನದಲ್ಲಿ ಹಾಗೂ ಹೊರಗೆ ಪ್ರತ್ಯುತ್ತರ ನೀಡಿ ಎಂದು ಮುಖ್ಯಮಂತ್ರಿಯವರು ಶಾಸಕರುಗಳಿಗೆ ತಾಕೀತು ಮಾಡಿದರು ಎಂದು ತಿಳಿದುಬಂದಿದೆ.
ನಾನು ಉತ್ತಮ ಬಜೆಟ್ ಮಂಡಿಸಿದ್ದೇನೆ. ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೂ ಅನುದಾನ ನೀಡಿ, ಅಭಿವೃದ್ಧಿ ಕಾರ್ಯಗಳಿಗೂ ಸೂಕ್ತ ಅನುದಾನ ಒದಗಿಸಿದ್ದೇನೆ. ಎಲ್ಲೂ ಕೂಡ ಆರ್ಥಿಕ ಶಿಸ್ತು ಮೀರದಂತೆ ನೋಡಿಕೊಳ್ಳಲಾಗಿದೆ. ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಸೇರಿ ಎಲ್ಲ ವರ್ಗವನ್ನೂ ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ರೂಪಿಸಲಾಗಿದೆ. ಇಂತಹ ಬಜೆಟ್ ಅನ್ನು ಬಿಜೆಪಿ ಮತ್ತು ಜೆಡಿಎಸ್ನವರನ್ನು ಬಿಟ್ಟು ಉಳಿದವರೆಲ್ಲರೂ ಹೊಗಳುತ್ತಿದ್ದಾರೆ. ಪ್ರತಿಪಕ್ಷದವರ ಟೀಕೆಗಳಿಗೆ ತಕ್ಕ ಉತ್ತರ ನೀಡಿ ಎಂದು ಶಾಸಕರಿಗೂ ಸೂಚಿಸಿದರು ಎಂದು ಮೂಲಗಳು ಹೇಳಿವೆ.
ಎಲ್ಲಾ ಇಲಾಖೆಗಳಿಗೂ ಈ ಬಾರಿಯ ಬಜೆಟ್ನಲ್ಲಿ ಕಳೆದ ಬಾರಿಯ ಬಜೆಟ್ಗಿಂತ ಹೆಚ್ಚು ಹಣ ಕೊಟ್ಟಿದ್ದೇವೆ. ನೀರಾವರಿಗೆ ಒಟ್ಟು 3 ಸಾವಿರ ಕೋಟಿ ರು. ಗೂ ಹೆಚ್ಚು ಕೊಟ್ಟಿದ್ದೇವೆ. ಬೆಂಗಳೂರು ಅಭಿವೃದ್ಧಿಗೂ ಕಳೆದ ಬಜೆಟ್ಗಿಂತ ಈ ಬಜೆಟ್ನಲ್ಲಿ ಹೆಚ್ಚಿನ ಹಣ ನೀಡಿದ್ದೇವೆ. ಆದ್ದರಿಂದ ಬಜೆಟ್ ಪುಸ್ತಕವನ್ನು ಮತ್ತೊಮ್ಮೆ ಓದಿಕೊಂಡು ಅಧಿವೇಶನದಲ್ಲಿ ಪರಿಣಾಮಕಾರಿಯಾಗಿ ವಿಷಯ ಮಂಡಿಸಿ. ಆರ್ಥಿಕ ಶಿಸ್ತು ಮೀರಿಲ್ಲ. ಇರುವ ಅವಕಾಶಕ್ಕಿಂತ ಕಡಿಮೆ ಸಾಲ ಮಾಡಿದ್ದೇವೆ. ಆದರೂ ಬಿಜೆಪಿ ಸಾರ್ವಜನಿಕವಾಗಿ ಸುಳ್ಳು ಹೇಳುತ್ತಾ ತಪ್ಪು ಮಾಹಿತಿ ನೀಡುತ್ತಿದೆ. ಇದನ್ನು ಜನರಿಗೆ ತಿಳಿಸಬೇಕು ಎಂದು ತಿಳಿಸಿದರು ಎಂದು ಮೂಲಗಳು ಹೇಳಿವೆ.