ಮದುವೆಯ ಆಶ್ವಾಸನೆ ನೀಡಿ ದೈಹಿಕ ಸಂಬಂಧ ಬೆಳೆಸಿದ ಆರೋಪ: 9 ತಿಂಗಳ ಗರ್ಭಿಣಿ ಯುವತಿ ಆರೋಪ

ಪುತ್ತೂರು ಜೂನ್ 26: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.

ಬಪ್ಪಳಿಗೆ ನಿವಾಸಿ ಕೃಷ್ಣ ರಾವ್ (21) ಆರೋಪಿ ಯುವಕ. ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಯುವಕ ಹಾಗೂ ಯುವತಿ ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆರೋಪಿಯು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವತಿಯನ್ನು ಮನೆಗೆ ಕರೆತಂದು ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ನೊಂದ ಯುವತಿ ಜೂನ್ 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದಾನೆ.

ಪೊಲೀಸರಿಗೆ ದೂರು ದೂರಿನಲ್ಲಿ ತಿಳಿಸಿರುವಂತೆ 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಕೃಷ್ಣ ರಾವ್, ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದು, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಯತ್ನಿಸಿದ್ದು, ಯುವತಿ ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ ಹಾಗೂ ಈ ವಿಷಯವನ್ನು ರಹಸ್ಯವಾಗಿಡುವಂತೆ ತಿಳಿಸಿದ್ದ. ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಮನೆಗೆ ಕರೆಸಿ ಕೊಂಡು ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಯುವತಿ ಗರ್ಭವತಿಯಾಗಿದ್ದು, ಈ ವಿಚಾರವನ್ನು ತನ್ನ ತಂದೆ ತಾಯಿಗೆ ತಿಳಿಸಿದ್ದಾಳೆ. ಬಳಿಕ ಮನೆಯವರು ಯುವಕನ ಮನೆಯವರಿಗೆ ವಿಚಾರ ತಿಳಿಸಿದಾಗ ಮಾತುಕತೆ ನಡೆದು ಮದುವೆಗೆ ಹುಡುಗನ ಕಡೆಯವರು ಒಪ್ಪಿಗೆ ನೀಡಿದ್ದರು ಎಂದು ಯುವತಿ ತಿಳಿಸಿದ್ದಾಳೆ. ಆದರೆ, ಈಗ ಯುವತಿ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69 ರಂತೆ ಪ್ರಕರಣ ದಾಖಲಿಸಿ ಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.