ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆ? ಕಿರಾನಾ ಬೆಟ್ಟದ ವಿವಾದ

ಇಸ್ಲಾಮಾಬಾದ್: ಭಾರತ ಪ್ರತಿದಾಳಿ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಪರಮಾಣು ವಿಕಿರಣ ಸೋರಿಕೆ ಆಗುತ್ತಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.
ಪಾಕ್ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿತ್ತು. ಈ ವಾಯು ನೆಲೆ ಕಿರಾನಾ ಬೆಟ್ಟದೊಂದಿಗೆ ಸಂಪರ್ಕ ಹೊಂದಿದೆ. ಕಿರಾನಾ ಬೆಟ್ಟದ ಕೆಳಗಡೆ ಇರುವ ಅಣ್ವಸ್ತ್ರ ಗೋದಾಮಿನಿಂದ ವಿಕಿರಣ ಸೋರಿಕೆಯಾಗುತ್ತಿದೆ ಎಂಬ ವದಂತಿ ಎದ್ದಿದೆ.
ಈ ಬೆಟ್ಟದ ಸಮೀಪದಲ್ಲಿರುವ ಸ್ಥಳೀಯರಿಗೆ ಆರೋಗ್ಯ ಸಮಸ್ಯೆ ಆಗುತ್ತಿದ್ದು ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಷ್ಟೇ ಅಲ್ಲದೇ ಸರಿಯಾಗಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನದ ಪರಮಾಣು ನಿಯಂತ್ರಣ ಪ್ರಾಧಿಕಾರ (PNRA) ವೆಬ್ಸೈಟ್ ನಿಗೂಢವಾಗಿ ಆಫ್ಲೈನ್ ಆಗಿದೆ.
ಸೋರಿಕೆಯಾಗುತ್ತಿರುವ ಬಗ್ಗೆ ವದಂತಿ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಅಮೆರಿಕ-ಈಜಿಪ್ಟ್ ನಿಂದ 2 ವಿಶೇಷ ವಿಮಾನಗಳು ಪಾಕಿಸ್ತಾನಕ್ಕೆ ಆಗಮಿಸಿದ್ದು, ಈ ವಿಶೇಷ ವಿಮಾನಗಳು ವಿಕಿರಣ ಸೋರಿಕೆ ಪತ್ತೆ ಮಾಡುವ ವಿಮಾನಗಳು ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಜೊತೆಗೆ ಈಜಿಪ್ಟ್ನಿಂದ ಅಪಾರ ಪ್ರಮಾಣದ ಬೋರಾನ್ ರಾಸಾಯನಿಕವನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ವಿಕಿರಣ ಸೋರಿಕೆಯನ್ನು ತಟಸ್ಥಗೊಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ವಿಕಿರಣ ಸೋರಿಕೆ ಆಗುತ್ತಿರುವ ಬಗ್ಗೆ ಇಲ್ಲಿಯವರೆಗೆ ಪಾಕ್ ಸರ್ಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಸೋಮವಾರ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಯೊಬ್ಬರು ಕಿರಾನಾ ಬೆಟ್ಟದ ಮೇಲೆ ದಾಳಿ ನಡೆದಿದ್ಯಾ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎಕೆ ಭಾರ್ತಿ ಅವರು, ಕಿರಾನಾ ಬೆಟ್ಟದಲ್ಲಿ ಪರಮಾಣು ಸ್ಥಾವರವಿದೆ ಎಂದು ತಿಳಿಸಿದ್ದಕ್ಕೆ ಧನ್ಯವಾದಗಳು. ನಮಗೆ ಈ ವಿಚಾರ ತಿಳಿದಿರಲಿಲ್ಲ ಎಂದು ಉತ್ತರಿಸಿದರು. ಮುಂದುವರಿದು ಕಿರಾನಾ ಬೆಟ್ಟದ ಮೇಲೆ ನಾವು ಯಾವುದೇ ದಾಳಿ ಮಾಡಿಲ್ಲ. ಅಲ್ಲಿ ಏನಿದೆ ಎನ್ನುವುದು ಗೊತ್ತಿಲ್ಲ ಎಂದಿದ್ದರು.