ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಶಾಂತಿ ಮಾತುಕತೆಗೆ ಆಹ್ವಾನ: ಭಾರತಕ್ಕೆ ಮತ್ತೆ ಪ್ರಸ್ತಾಪ

ಟೆಹರಾನ್: ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತೊಮ್ಮೆ ಭಾರತದ ಜೊತೆ ಶಾಂತಿ ಮಾತುಕತೆಯ ಪ್ರಸ್ತಾಪವನ್ನು ಇರಿಸಿದ್ದಾರೆ.ಟರ್ಕಿಯ ನಂತರ ಷರೀಫ್ ಈಗ ಎರಡು ದಿನಗಳ ಭೇಟಿಗಾಗಿ ಇರಾನ್ಗೆ ಆಗಮಿಸಿದ್ದಾರೆ. ಈ ವೇಳೆ ಟೆಹರಾನ್ನಲ್ಲಿ ಮಾತನಾಡಿದ ಅವರು, ಕಾಶ್ಮೀರ ಸಮಸ್ಯೆ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನ ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರ ಸಮಸ್ಯೆ ಮತ್ತು ನೀರಿನ ಸಮಸ್ಯೆ ಸೇರಿದಂತೆ ಎಲ್ಲಾ ವಿವಾದಗಳನ್ನು ಮಾತುಕತೆಗಳ ಮೂಲಕ ಪರಿಹರಿಸಲು ನಾವು ಬಯಸುತ್ತೇವೆ. ವ್ಯಾಪಾರ ಮತ್ತು ಭಯೋತ್ಪಾದನೆ ನಿಗ್ರಹದ ಬಗ್ಗೆ ನಮ್ಮ ನೆರೆಹೊರೆಯವರೊಂದಿಗೆ ಮಾತನಾಡಲು ಸಹ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.ಭಯೋತ್ಪಾದನೆ ಮತ್ತು ಮಾತುಕತೆ ಜೊತೆಯಾಗಿ ನಡೆಯಲು ಸಾಧ್ಯವಿಲ್ಲ ಎಂದು ಭಾರತ ಈಗಾಗಲೇ ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ. ಭಯೋತ್ಪಾದನೆ ಮತ್ತು ವ್ಯಾಪಾರ ಜತೆಯಾಗಿ ನಡೆಯಲು ಸಾಧ್ಯವಿಲ್ಲ ಮತ್ತು ನೀರು ಮತ್ತು ರಕ್ತ ಒಟ್ಟಿಗೇ ಹರಿಯಲು ಸಾಧ್ಯವಿಲ್ಲ ಎಂದು ಹೇಳಿದೆ.
ಪಾಕಿಸ್ತಾನದೊಂದಿಗೆ ಮಾತುಕತೆ ನಡೆಯುತ್ತದೆ ಎಂದಾದರೆ, ಅದು ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಇರುತ್ತದೆ ಎಂದು ಭಾರತ ಸ್ಪಷ್ಟವಾಗಿ ತಿಳಿಸಿದೆ.