ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಸುರಿದ ಹೆಬ್ಬಾಳ ಯಮಹಾ ಶೋ ರೂಂಗೆ ₹5,000 ದಂಡ ವಿಧಿಸಿದ ಬಿಬಿಎಂಪಿ!

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಸುರಿದಿದ ಹಿನ್ನೆಲೆಯಲ್ಲಿ ಹೆಬ್ಬಾಳದ ಯಮಹಾ ಬೈಕ್ ಶೋ ರೂಂಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 5,000 ರೂ. ದಂಡ ವಿಧಿಸಿದೆ.
ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ ರಾವ್, ಶೋ ರೂಂ ಸಿಬ್ಬಂದಿಗಳು ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿಯುತ್ತಿರುವುದನ್ನು ಕಂಡು, ದಂಡ ವಿಧಿಸಲು ಬಿಬಿಎಂಪಿ ಮಾರ್ಷಲ್ಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ನಗರದಲ್ಲಿ ರಸ್ತೆ ಬದಿ ಕಸ ಸುರಿಯುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದರು.

ಬಳಿಕ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಬಳಿಯ ಪಾದಚಾರಿ ಮಾರ್ಗವನ್ನು ಪರಿಶೀಲಿಸಿದ ಅವರು, ಪಾದಚಾರಿಗಳಿಗೆ ಯಾವುದೇ ಅಡೆತಡೆಯಿಲ್ಲದ ರೀತಿಯಲ್ಲಿ ಮಾರ್ಗವನ್ನು ನಿರ್ಮಿಸಬೇಕು ಎಂದು ಸೂಚಿಸಿದರು. ಹಾನಿಗೊಳಗಾದ ಭಾಗಗಳನ್ನು ವಿಳಂಬವಿಲ್ಲದೆ ದುರಸ್ತಿ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಬ್ಬಾಳದ ಅಮೃತ್ ಸಾಗರ್ ಹೋಟೆಲ್ ಬಳಿಯ 4ನೇ ಮುಖ್ಯ ರಸ್ತೆಯಲ್ಲಿರುವ ಕಸ ಸುರಿಯುವ ಸ್ಥಳವನ್ನು ಪರಿಶೀಲಿಸಿದ ಅವರು, ಆ ಪ್ರದೇಶವನ್ನು ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.