ಬೆಟ್ಟಿಂಗ್ ಕಟ್ಟಿ 500 ರೂ. ಕಳೆದುಕೊಂಡ ಗೃಹ ಸಚಿವ ಡಾ. ಜಿ. ಪರಮೇಶ್ವರ್: ಕಬಡ್ಡಿ ಪಂದ್ಯಾವಳಿಯಲ್ಲಿ ಜಿಲ್ಲಾಧಿಕಾರಿ ಜೊತೆ ಬಾಜಿ

ತುಮಕೂರು: ಅಕ್ರಮ ದಂಧೆಗಳಿಗೆ ಕಡಿವಾಣ ಹಾಕುವುದೇ ಗೃಹ ಇಲಾಖೆ. ಆದ್ರೆ, ಇದೇ ಗೃಹ ಇಲಾಖೆ ಸಚಿವರು ಬೆಟ್ಟಿಂಗ್ (Betting) ಕಟ್ಟಿ ಭಾರೀ ಚರ್ಚೆಗೆ ಗ್ರಾಸರಾಗಿದ್ದಾರೆ. ಹೌದು… ತುಮಕೂರಿನಲ್ಲಿ ಭಾನುವಾರ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Home Minister G Parameshwar )ಬೆಟ್ಟಿಂಗ್ ಕಟ್ಟಿ 500 ರೂಪಾಯಿ ಕಳೆದುಕೊಂಡಿದ್ದಾರೆ. ತಮಾಷೆಗಾಗಿ ಬೆಟ್ಟಿಂಗ್ ಕಟ್ಟಿದ್ದರೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಆಗುತ್ತಿದ್ದು, ಒಂದು ಸ್ಥಾನದಲ್ಲಿದ್ದವರು ಈ ರೀತಿ ಮಾಡುವುದು ಸರಿಯೇ ಎಂದು ನೆಟ್ಟಿಗರು ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿ ಟೀಕಿಸುತ್ತಿದ್ದಾರೆ.

ತುಮಕೂರಿನಲ್ಲಿ ಭಾನುವಾರ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿದ್ದರು. ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಬಾಜಿ ಹಣವನ್ನು ಕಳೆದುಕೊಂಡ ಸಚಿವ ಪರಮೇಶ್ವರ್, ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸುವಾಗ ಈ ವಿಷಯವನ್ನು ಸ್ವತಃ ಬಹಿರಂಗಪಡಿಸಿದರು.
ವಿಜೇತ ತಂಡಕ್ಕೆ ಪ್ರಶಸ್ತಿ ವಿತರಿಸಿದ ನಂತರ ಪರಮೇಶ್ವರ್ ಅವರು ಮಾತನಾಡಿ, ನಾನು 500 ಕಳೆದುಕೊಂಡು ಬಿಟ್ಟೆ. ವಿಜಯಪುರ ತಂಡ ಗೆಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಜತೆ ಬೆಟ್ಟಿಂಗ್ ಕಟ್ಟಿದ್ದೆ. ಆದರೆ ಸೋತೆ ಎಂದು ತಾವೇ ಹೇಳಿಕೊಂಡಿದ್ದು, ಈ ಸಂಬಂಧ ಇದೀಗ ಭಾರೀ ಟೀಕೆಗೆ ಗುರಿಯಾಗಿದ್ದಾರೆ.
ಗೃಹ ಸಚಿವರಾಗಿದ್ದವರು ಬಹಿರಂಗವಾಗಿಯೇ ಬೆಟ್ಟಿಂಗ್ ಆಡಿರುವ ಬಗ್ಗೆ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಕೆಲವರು ತಮಾಷೆಗಾಗಿ ಬೆಟ್ಟಿಂಗ್ ಕಟ್ಟಿದ್ದಾರೆ ಬಿಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಇದಕ್ಕೆ ವಿರುದ್ಧವಾಗಿ ತಮಾಷೆಗಾಗಿ ಕಟ್ಟಿರಬಹುದು. ಆದರೆ, ಅವರು ಯಾವ ಸ್ಥಾನದಲ್ಲಿದ್ದಾರೆ ಎನ್ನುವುದನ್ನು ಅರಿತುಕೊಳ್ಳಬೇಕಿತ್ತು.
ಗೃಹ ಸಚಿವರಾಗಿ ಇಂತಹ ಅಪರಾಧ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸುವವರೇ ಬೆಟ್ಟಿಂಗ್ ಕಟ್ಟಿರುವ ಬಗ್ಗೆ ಹೇಳಿಕೊಳ್ಳುವ ಮೂಲಕ ಸಮಾಜಕ್ಕೆ ಇವರು ಯಾವ ಸಂದೇಶ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಪರಮೇಶ್ವರ್ ಅವರು ಬೆಟ್ಟಿಂಗ್ ಬಗ್ಗೆ ಸೋಷಿಯಲ್ ಮೀಡಿಯಾನಲ್ಲಿ ಟ್ರೋಲ್ ಜತೆಗೆ ನೆಟ್ಟಿಗರ ಟೀಕೆಗಳಿಗೆ ಗುರಿಯಾಗಿದ್ದಾರೆ.