ನಾಗರಹಾವು ಕಚ್ಚಿ ಬಾಲಕ ದಾರುಣ ಅಂತ್ಯ

ವಿಜಯನಗರ:ವಿಜಯನಗರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಕೇವಲ 500 ರೂಪಾಯಿ ಆಸೆಗಾಗಿ ಬಾಲಕನೊಬ್ಬ ನಾಗರಹಾವು ಹಿಡಿಯಲು ಹೋಗಿದ್ದಾನೆ. ಈ ವೇಳೆ ಹಾವು ಕಚ್ಚಿ 17 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಹೊಸಪೇಟೆ ನಗರದ ಮುದ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಬ್ದುಲ್ ರಜಾಕ್ ಮೃತಪಟ್ಟ ಹುಡುಗ. ಹಾವು ಕಚ್ಚಿರೋ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ.
ಮನೆಯೊಂದಕ್ಕೆ ಬಂದಿದ್ದ ನಾಗರಹಾವನ್ನು ಅಬ್ದುಲ್ ರಜಾಕ್ ಹಿಡಿಯಲು ಯತ್ನಿಸಿದಾಗ ಕೈಗೆ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಹಾವು ಹಿಡಿದರೆ 500 ಸಿಗುತ್ತದೆ ಎಂಬ ಆಸೆಗೆ ಹುಡುಗ ಹಾವು ಹಿಡಿಯಲು ಹೋಗಿದ್ದ ಎನ್ನಲಾಗಿದೆ.
ಹಾವಿನ ಬಾಲವನ್ನು ಹಿಡಿದು ಮುಂದೆ ಹೆಡೆಯನ್ನು ಹಿಡಿಯುವ ವೇಳೆ ಹಾವು ಕೈಗೆ ಕಚ್ಚಿದೆ.
ಹಾವು ಕಚ್ಚಿದ ಬಳಿಕ ಎರಡು ತಾಸು ಮನೆಯಲ್ಲಿ ಯಾರಿಗೂ ಹೇಳಿರಲಿಲ್ಲ. ಆರೋಗ್ಯದಲ್ಲಿ ಏರುಪೇರಾದಾಗ, ಕೂಡಲೇ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ, ನಂತರ ಹುಬ್ಬಳ್ಳಿಗೆ ಕಳುಹಿಸಿಕೊಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ನವೆಂಬರ್ 4ರಂದು ಈ ಘಟನೆ ನಡೆದಿತ್ತು. ಇದೀಗ ಬಾಲಕ ಸಾವನ್ನಪ್ಪಿದ್ದು, ಈ ಕುರಿತು ಚಿತ್ತವಾಡ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.