ಬೀದರ್ ಕೆಡಿಪಿ ಸಭೆಯಲ್ಲಿ ಎಂಎಲ್ಎ – ಎಂಎಲ್ಸಿ ಜಗಳ: ಸಚಿವ ಈಶ್ವರ ಖಂಡ್ರೆ ಎದುರೇ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ವಾಗ್ವಾದ!

ಬೀದರ್: ಬೀದರ್ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಹುಮನಾಬಾದ್ ಶಾಸಕ ಸಿದ್ದು ಪಾಟೀಲ್ ಮತ್ತು ಎಂಎಲ್ಸಿ ಭೀಮರಾವ್ ಪಾಟೀಲ್ ನಡುವಿನ ಭೀಕರ ವಾಗ್ವಾದಕ್ಕೆ ಸಾಕ್ಷಿಯಾಯಿತು. ಸಭೆಯಲ್ಲಿ ಅರಣ್ಯ ಇಲಾಖೆಯ ಭೂಮಿಯನ್ನು ಎಂಎಲ್ಸಿ ಭೀಮರಾವ್ ಪಾಟೀಲ್ ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಗಮನಕ್ಕೆ ತಂದರು.


ಈ ಗಂಭೀರ ಆರೋಪದಿಂದ ಕೆರಳಿದ ಭೀಮರಾವ್ ಪಾಟೀಲ್ ಶಾಸಕರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಮಾತಿಗೆ ಮಾತು ಬೆಳೆದು ಇಬ್ಬರು ನಾಯಕರ ನಡುವಿನ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರಿಂದ ಸಭೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಸಚಿವ ಈಶ್ವರ ಖಂಡ್ರೆ ಅವರು ಮಧ್ಯಪ್ರವೇಶಿಸಿ ಉಭಯ ನಾಯಕರನ್ನು ಸಮಾಧಾನಪಡಿಸುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಸಾರ್ವಜನಿಕ ಕೆಲಸಗಳ ಬಗ್ಗೆ ಚರ್ಚಿಸಬೇಕಾದ ಸಭೆಯಲ್ಲಿ ಜನಪ್ರತಿನಿಧಿಗಳು ಈ ರೀತಿ ವರ್ತಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
