ಕರೂರ್ ಕಾಲ್ತುಳಿತ ದುರಂತ: ನಟ ವಿಜಯ್ಗೆ ಸಿಬಿಐ ನೋಟಿಸ್; 41 ಜನರ ಸಾವಿನ ಪ್ರಕರಣದ ತನಿಖೆ ತೀವ್ರ!

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ (Karur Stampede) ನಡೆದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ವಿಜಯ್ (Vijay) ಅವರಿಗೆ ಸಿಬಿಐ (CBI) ನೋಟಿಸ್ ಜಾರಿ ಮಾಡಿದೆ.


ಸೆಪ್ಟೆಂಬರ್ನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41 ಜನರು ಸಾವಿಗೀಡಾಗಿದ್ದರು. ಹಲವರು ಗಾಯಗೊಂಡಿದ್ದರು. ಪ್ರಕರಣದ ತನಿಖೆಯ ಭಾಗವಾಗಿ ವಿಚಾರಣೆಗಾಗಿ ಹಾಜರಾಗುವಂತೆ ವಿಜಯ್ಗೆ ನೋಟಿಸ್ನಲ್ಲಿ ತಿಳಿಸಲಾಗಿದೆ.

ಕಳೆದ ವರ್ಷ ಸೆ.27 ರಂದು ಕರೂರಿನ ವೇಲುಸಾಮಿಪುರಂನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ವಿಜಯ್ ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅಗಾಧವಾದ ಜನಸಂದಣಿಯು ಅವ್ಯವಸ್ಥೆಗೆ ಕಾರಣವಾಯಿತು. ಪರಿಣಾಮವಾಗಿ ಕಾಲ್ತುಳಿತ ದುರಂತ ಸಂಭವಿಸಿತು.

ಈ ದುರಂತ ರಾಜಕೀಯ ಕೋಲಾಹಲಕ್ಕೆ ಕಾರಣವಾಯಿತು. ತಮಿಳುನಾಡು ಪೊಲೀಸರು ಕೈಗೆತ್ತಿಕೊಂಡಿದ್ದ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ಹಸ್ತಾಂತರಿಸಿತ್ತು. ಚೆನ್ನೈನಲ್ಲಿರುವ ಟಿವಿಕೆ ಕೇಂದ್ರ ಕಚೇರಿಗೂ ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿ ಕೆಲವು ದಾಖಲೆಗಳು ಮತ್ತು ರ್ಯಾಲಿ ದಿನ ಸಂಚರಿಸಿದ ಬಸ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು.