ತಿಮ್ಮಪ್ಪನ ಸನ್ನಿಧಿಯಲ್ಲಿ ಮುಡಿ ಸಮರ್ಪಿಸಿದ ವಿಶ್ವ ಚೆಸ್ ಚಾಂಪಿಯನ್ ಡಿ. ಗುಕೇಶ್

ಆಂಧ್ರಪ್ರದೇಶ: ವಿಶ್ವ ಚೆಸ್ ಚಾಂಪಿಯನ್ಷಿಪ್ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಕುಟುಂಬ ಸಮೇತರಾಗಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿ ಸಮರ್ಪಿಸಿದ್ದಾರೆ.
ಬಳಿಕ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೇವಲ 18 ವರ್ಷ ವಯಸ್ಸಿನಲ್ಲಿ ವಿಶ್ವ ಚೆಸ್ ಚಾಂಪಿಯನ್ ಗೆದ್ದ ಆಟಗಾರ ಎಂಬ ಹೆಗ್ಗಳಿಕೆಗೆ ಗುಕೇಶ್ ಪಾತ್ರರಾಗಿದ್ದಾರೆ.
ಸಿಂಗಾಪುರದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದ್ದರು. ಇದೀಗ ಇವರು ತಮ್ಮ ಕುಟುಂಬ ಸದಸ್ಯರೊಂಗಿದೆ ತಿರುಪತಿಗೆ ತೆರಳಿ ತಿಮ್ಮಪ್ಪನ ಸನ್ನಿಧಾನದಲ್ಲಿ ಮುಡಿ ಕೊಟ್ಟು ಬಂದಿದ್ದಾರೆ. ಆ ಬಳಿಕ ಮಾತನಾಡಿದ ಅವರು “2025 ರಲ್ಲಿ ಸಾಕಷ್ಟು ಪ್ರಮುಖ ಚೆಸ್ ಪಂದ್ಯಾವಳಿಗಳಿವೆ. ಆದ್ದರಿಂದ ನಾನು ಅದರ ಮೇಲೆ ಗಮನವನ್ನು ಕೇಂದ್ರೀಕರಿಸುತ್ತಿದ್ದೇನೆ. ನಾನು ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸಲು ಬಯಸುತ್ತೇನೆ. ದೇವರ ಕೃಪೆಯಿಂದ ಎಲ್ಲಾ ಒಳ್ಳೆಯದೇ ಆಗುತ್ತದೆ ಎಂದು ಭಾವಿಸುತ್ತೇನೆ” ಎಂದು ಹೇಳಿದರು.