ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಬೆಂಕಿಗೆ ಓರ್ವ ಬಲಿ, ಇಬ್ಬರ ಸ್ಥಿತಿ ಗಂಭೀರ!

ಹಾಸನ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ (Electric Pole) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿ, ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಅರಸೀಕೆರೆ ತಾಲೂಕಿನ, ಗವಿಮಠ ಗೇಟ್ ಬಳಿ ನಡೆದಿದೆ.

ವಿದ್ಯುತ್ ಇಲಾಖೆ ನೌಕರ ಮಂಜುನಾಥ್ (25) ಮೃತಪಟ್ಟ ದುರ್ದೈವಿ. ಕಾರಿನಲ್ಲಿ ಹಾರನಹಳ್ಳಿ ಗ್ರಾಮದ ಮಂಜುನಾಥ್, ಪವನ್ ಹಾಗೂ ನವೀನ್ ಅರಸೀಕೆರೆಯಿಂದ ಬಾಣಾವರದ ಕಡೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಮತ್ತೊಂದು ಬದಿಯ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸ್ಥಳದಲ್ಲಿದ್ದವರು ಕಾರಿನೊಳಗಿದ್ದ ಮೂವರನ್ನು ಹೊರಗೆ ಕರೆ ತಂದಿದ್ದಾರೆ. ಅಷ್ಟರಲ್ಲಿ ಮಂಜುನಾಥ್ ಮೃತಪಟ್ಟಿದ್ದಾರೆ.

ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.