ಬೆಳ್ತಂಗಡಿ ವಿದ್ಯಾರ್ಥಿನಿ ಸಾವಿನ ಸಂಬಂಧ ಸಭೆಗೆ ಅಡ್ಡಿಯಿಲ್ಲ: ಹೈಕೋರ್ಟ್

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಸಂಬಂಧ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಮಂಗಳವಾರ ನಗರದ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆ ನಡೆಸದಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಪ್ರಶ್ನಿಸಿ, ವಿನಯ್ ಶ್ರೀನಿವಾಸ್ ಮತ್ತು ವಿಜಯ್ ಭಾಸ್ಕರ್ ಎಂಬವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಡೆಸಿತು.
ಪೊಲೀಸ್ ಅಧಿಕಾರಿಗಳು ಹಾಗೂ ಸರ್ಕಾರ ಯಾವುದೇ ಸಭೆ, ಪ್ರತಿಭಟನೆಗಳನ್ನು ತಡೆಯುವಂತಿಲ್ಲ. ಆದರೆ, ಕಾನೂನು ಉಲ್ಲಂಘನೆಯಾದರೆ ಮಾತ್ರ ಕ್ರಮಕ್ಕೆ ಮುಂದಾಗಬೇಕು. ಕಾನೂನು ಉಲ್ಲಂಘನೆಯಾಗಲಿದೆ ಎಂಬುದಾಗಿ ಊಹೆ ಮಾಡಿಕೊಂಡು ಪ್ರತಿಭಟನೆ ಸಭೆಗಳನ್ನು ತಡೆಯುವುದಕ್ಕೆ ಅವಕಾಶವಿಲ್ಲ ಎಂದು ಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಬೆಳ್ತಂಗಡಿ ವಿದ್ಯಾರ್ಥಿನಿ ಸಾವಿಗೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ದರ್ಪ ವಿರೋಧಿಸಿ ಸಾಹಿತಿಗಳು, ಚಿಂತಕರು, ಹೋರಾಟಗಾರರು ಮಂಗಳವಾರ ಶೇಷಾದ್ರಿಪುರದ ಎಐಟಿಯುಸಿ ಸಭಾಂಗಣದಲ್ಲಿ ಸಮಾಲೋಚನಾ ಸಭೆ ಆಯೋಜಿಸಿದ್ದರು. ಈ ಸಭೆ ಆಯೋಜನೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ 10:22ಕ್ಕೆ ಆಯೋಜಕರ ವಾಟ್ಸ್ಆ್ಯಪ್ ಸಂಖ್ಯೆಗೆ ಪೊಲೀಸರು ನೋಟಿಸ್ ನೀಡಿದ್ದರು. ಹೈಕೋರ್ಟ್ ಆದೇಶದಂತೆ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಿದ್ದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಶೇಷಾದ್ರಿಪುರ ಪೊಲೀಸರ ನೋಟಿಸ್ ಮೀರಿ ಸಭೆ ನಡೆಸಿದರೆ, ಅದಕ್ಕಾಗಿ ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ಸಂಘಟಕರಿಗೆ ತಿಳಿಸಿದ್ದಾರೆ” ಎಂದು ಪೀಠಕ್ಕೆ ತಿಳಿಸಿದ್ದರು.
ಅಲ್ಲದೆ, ”ಪೊಲೀಸರು ಕಾನೂನುಬಾಹಿರವಾಗಿ ನೀಡಲಾದ ವಾಟ್ಸ್ಆ್ಯಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ದುರುದ್ದೇಶಪೂರಿತ. ಸಭೆ ಕಚೇರಿಯೊಳಗೆ ನಡೆಯುತ್ತಿದ್ದು, ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆ ಪ್ರತಿಭಟನೆ ಅಲ್ಲದೇ ಇರುವುದರಿಂದ, ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.