ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸಿಪಾಯಿ ಸೇವೆಯಿಂದ ವಜಾ; ಜಾತಿ ನಿಂದನೆ ಆರೋಪ

ಕಲಬುರಗಿ: ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಸಿಪಾಯಿ ಹುದ್ದೆಯ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ ಕಡಗಂಚಿ ವಜಾಗೊಂಡ ಸಿಬ್ಬಂದಿ ಎಂದು ತಿಳಿದುಬಂದಿದೆ.
ಎಂ.ಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ, ಅಶ್ಲೀಲ ಪದಗಳಿಂದ ನಿಂದನೆ ಮಾಡುವುದು, ಜಾತಿಯನ್ನು ಗುರಿಯಾಗಿಸಿ ಹೀಯಾಳಿಸುವುದು ಹಾಗೂ ಜೀವ ಬೆದರಿಕೆ ಹಾಕಿರುವುದಾಗಿ ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ವಿದ್ಯಾರ್ಥಿನಿಯ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಆರೋಪಿಯನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
