ಲೋಕಾರ್ಪಣೆಗೂ ಮುನ್ನವೇ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇನಲ್ಲಿ ಸರಣಿ ಅಪಘಾತ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರಿಂದ ನಾಳೆ (ಏಪ್ರಿಲ್ 14) ಉದ್ಘಾಟನೆಗೊಳ್ಳಲಿರುವ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೋಹಂದ್ ರೇಂಜ್ನಲ್ಲಿ ಈ ಅವಘಡ ನಡೆದಿದೆ.

ಅತಿಯಾದ ವೇಗ ಮತ್ತು ಹಠಾತ್ ಬ್ರೇಕ್ ವೈಫಲ್ಯದಿಂದಾಗಿ ಎಲ್ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಸುಮಾರು 6 ಕಾರುಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನಗಳು ರಸ್ತೆಯಲ್ಲೇ ರಾಶಿಯಾಗಿ ಬಿದ್ದಿದ್ದವು. ಸಿಲಿಂಡರ್ ತುಂಬಿದ ಟ್ರಕ್ ಆಗಿದ್ದರೂ ಯಾವುದೇ ಸ್ಫೋಟ ಸಂಭವಿಸದ ಕಾರಣ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಪೊಲೀಸರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಹಾನಿಯಾದ ಬಗ್ಗೆ ಯಾವುದೇ ವರದಿಯಾಗಿಲ್ಲ.
ಅಪಘಾತದ ತೀವ್ರತೆಯಿಂದಾಗಿ ಎಕ್ಸ್ಪ್ರೆಸ್ವೇಯಲ್ಲಿ ಕೆಲ ಕಾಲ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಿಹಾರಿಗಢ ಪೊಲೀಸರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ, ಕ್ರೇನ್ ಮೂಲಕ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿದ್ದಾರೆ. ಸದ್ಯ ಈ ಭಾಗದಲ್ಲಿ ಸಂಚಾರ ಸುಗಮವಾಗಿದೆ.
ನಾಳೆ ಪ್ರಧಾನಿ ಮೋದಿ ಅವರು ಎಕ್ಸ್ಪ್ರೆಸ್ವೇ ಉದ್ಘಾಟಿಸಲಿರುವ ಹಿನ್ನೆಲೆಯಲ್ಲಿ, ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭದ್ರತಾ ವ್ಯವಸ್ಥೆಗಳ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹೈ-ಪ್ರೊಫೈಲ್ ಭೇಟಿಯ ಸಮಯದಲ್ಲೇ ಅಪಘಾತ ಸಂಭವಿಸಿರುವುದು ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ಘಟನೆಯ ನಂತರ ಪೊಲೀಸರು ಎಚ್ಚೆತ್ತುಕೊಂಡಿದ್ದು, ವಿಐಪಿ ಸಂಚಾರಕ್ಕೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಅಪಘಾತದ ಹೊರತಾಗಿಯೂ ನಾಳಿನ ಉದ್ಘಾಟನಾ ಸಮಾರಂಭ ನಿಗದಿಯಂತೆ ನಡೆಯಲಿದೆ. ಉದ್ಘಾಟನೆಗೂ ಮುನ್ನ ಪ್ರಧಾನಿಯವರು ಉತ್ತರಾಖಂಡದ ದತ್ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಎಕ್ಸ್ಪ್ರೆಸ್ವೇನಲ್ಲಿ ವಾಹನಗಳ ವೇಗಕ್ಕೆ ಮಿತಿ ಹೇರಲು ಮತ್ತು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎನ್ಎಚ್ಎಐ (NHAI) ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.