ಕೋಲ್ಕತ್ತಾ ದುರಂತ: ಗೋದಾಮು ಕುಸಿದು ಮೂವರು ಕಾರ್ಮಿಕರ ಸಾ*ವು; ಹಲವರು ಅವಶೇಷಗಳಡಿ

ಕೋಲ್ಕತ್ತಾ: ನಗರದ ತಾರಾತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಛಾವಣಿ ಬುಧವಾರ ಕುಸಿದ ಪರಿಣಾಮ ಕನಿಷ್ಠ ಮೂವರು ಕಾರ್ಮಿಕರು ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ 18 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸಲು ಸೇನೆ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅಪಘಾತದ ಬಳಿಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳಿಗೆ ನಗರದ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.’18 ಮಂದಿ ಇನ್ನೂ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಸೇನೆ, ಎನ್ಡಿಆರ್ಎಫ್, ವಿಪತ್ತು ನಿರ್ವಹಣಾ ಇಲಾಖೆ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ’ ಎಂದು ಸಿಎಂ ಅಧಿಕಾರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಘಟನೆಯ ಹಿನ್ನೆಲೆಯಲ್ಲಿ ಕೋಲ್ಕತ್ತಾ ನಗರದಲ್ಲಿ ನಡೆಯುತ್ತಿರುವ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ಜುಲೈ 31ರವರೆಗೆ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಆದೇಶಿಸಿದರು. ರಾಜ್ಯ ಸರ್ಕಾರವು ಕಟ್ಟಡ ಯೋಜನೆಯ ವಿಶೇಷ ಲೆಕ್ಕಪರಿಶೋಧನೆ ನಡೆಸಲಿದ್ದು, ನಗರದಲ್ಲಿನ ಎಲ್ಲ ನಿರ್ಮಾಣ ಯೋಜನೆಗಳ ಸ್ಥಳ ಪರಿಶೀಲನೆಯನ್ನೂ ಕೈಗೊಳ್ಳಲಿದೆ ಎಂದು ಅವರು ಹೇಳಿದರು.’ಈ ಕಟ್ಟಡ ಯೋಜನೆಗೆ 2026ರ ಜನವರಿ 17ರಂದು ಕೋಲ್ಕತ್ತಾ ಮಹಾನಗರ ಪಾಲಿಕೆ (ಕೆಎಂಸಿ) ಅನುಮೋದನೆ ನೀಡಿತ್ತು. ಪ್ರಾಥಮಿಕ ತನಿಖೆಯಲ್ಲಿ ದೋಷಪೂರಿತ ಕಟ್ಟಡ ಯೋಜನೆಗೆ ಅನುಮೋದನೆ ನೀಡಿರುವುದು ಕಂಡುಬಂದಿದೆ’ ಎಂದು ಸಿಎಂ ಸುವೇಂದು ಅಧಿಕಾರಿ ಹೇಳಿದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತ ಸಂಭವಿಸಿದ ವೇಳೆ ಸ್ಥಳದಲ್ಲಿ ಸುಮಾರು 50ರಿಂದ 60 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಾಂಕ್ರೀಟ್ ಹಾಕುವ ಕಾಮಗಾರಿ ನಡೆಯುತ್ತಿದ್ದಾಗ ಛಾವಣಿ ಏಕಾಏಕಿ ಕುಸಿದಿದೆ. ಇದರಿಂದ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, 13 ಮಂದಿಯನ್ನು ಅವಶೇಷಗಳಿಂದ ರಕ್ಷಿಸಿ ಎಸ್ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಕ್ಕೆ ಸೇನೆಯನ್ನು ನಿಯೋಜಿಸಲಾಗಿದ್ದು, ಎನ್ಡಿಆರ್ಎಫ್, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳ ಹಾಗೂ ಕೋಲ್ಕತ್ತಾ ಪೊಲೀಸ್ ಸಿಬ್ಬಂದಿಯೂ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
‘ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಿ ಅವರ ಜೀವಗಳನ್ನು ಉಳಿಸುವುದೇ ನಮ್ಮ ಮೊದಲ ಆದ್ಯತೆ. ವಿಪತ್ತು ನಿರ್ವಹಣಾ ಇಲಾಖೆ, ಅಗ್ನಿಶಾಮಕ ಸೇವೆಗಳ ಇಲಾಖೆ ಹಾಗೂ ಸೇನಾ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಲಾಗಿದೆ’ ಎಂದು ರಾಜ್ಯ ಕ್ರೀಡಾ ಸಚಿವ ಇಂದ್ರನೀಲ್ ಖಾನ್ ಹೇಳಿದರು.
ಈ ಮಧ್ಯೆ, ನಬನ್ನಾದಲ್ಲಿ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರ ನೆರವಿಗಾಗಿ ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ.
