ಮಣಿಪಾಲ: ಇಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆಗೈದ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ!

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್ರಾಜ್ ತಮ್ಮ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ಅವರೊಂದಿಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.ಆರೋಪಿಗಳಾದ ಶಿವಮೊಗ್ಗದ ಕಲ್ಲಪನಕೆರೆ ನಿವಾಸಿ ಅಕ್ಷಯ್ ಎ. (21), ಶಿವಮೊಗ್ಗ ಜಿಲ್ಲೆಯ ಹಲ್ಕೊಳ ಗ್ರಾಮ ನಿವಾಸಿ ಪುನೀತ್ ಎಸ್. (21), ಶಿವಮೊಗ್ಗದ ಮಂಜುನಾಥ ಬಡಾವಣೆ, ಪುರಲೆ ನಿವಾಸಿ ಶಮಂತ್ ಕೆ.ಆರ್. (21) ಹಾಗೂ ಶಿವಮೊಗ್ಗದ ವಿನೋಬನಗರ ನಿವಾಸಿ ಯಶ್ವಂತ್ ಬಿ.ಜೆ. (21) ಸ್ವಿಫ್ಟ್ ಡಿಜೈರ್ ಕಾರು ಹಾಗೂ ಫೋರ್ಡ್ ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ.ಆರೋಪಿಗಳು ಪವನ್ ಕುಮಾರ್ ಅವರನ್ನು ತಡೆದು ಯಾವುದೇ ಕಾರಣವಿಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಗಳಿಂದ ಹಾಗೂ ಕಾಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಆರೋಪಿಗಳಲ್ಲಿ ಒಬ್ಬನು ಮೆಟಲ್ ಪಂಚ್ನಿಂದ ಪವನ್ ಕುಮಾರ್ ಅವರ ಮುಖಕ್ಕೆ ಹೊಡೆದ ಪರಿಣಾಮ ಅವರ ಮೂಗಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದೇ ವೇಳೆ ಯಶ್ರಾಜ್ ಹಾಗೂ ಶ್ರೇಯಸ್ ಅವರ ಮೇಲೂ ಕಾಲಿನಿಂದ ಹಲ್ಲೆ ನಡೆಸಿ, ಬಟ್ಟೆ ಹರಿದು ಜೀವ ಬೆದರಿಕೆ ಹಾಕಲಾಗಿದೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ದೂರಿನ ಆಧಾರದ ಮೇಲೆ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.ತನಿಖೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಪ್ರಾಥಮಿಕ ತನಿಖೆಯಲ್ಲಿ ಬಂಧಿತ ನಾಲ್ವರೂ ಖಾಸಗಿ ಶಿಕ್ಷಣ ಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಎಂಬುದು ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಮಣಿಪಾಲ ಪೊಲೀಸ್ ಉಪನಿರೀಕ್ಷಕ ಬಿ.ಎನ್. ತಿಮ್ಮೇಶ್ ಅವರ ನೇತೃತ್ವದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.