ಹಾವೇರಿ: ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೂತ್ರವಿಸರ್ಜನೆ; ದೇವಸ್ಥಾನ ಅಪವಿತ್ರಗೊಳಿಸಿದ ವ್ಯಕ್ತಿ ಬಂಧನ!

ಹಾವೇರಿ: ದೇವಸ್ಥಾನವೊಂದನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ.
ಶಿಗ್ಗಾಂವಿ ಪಟ್ಟಣದಲ್ಲಿ ಗುರುವಾರ ರಾತ್ರಿ ಸುಮಾರು 9.30ರ ವೇಳೆಗೆ ಘಟನೆ ನಡೆದಿದ್ದು, ಇಲ್ಲಿನ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ದುಷ್ಕರ್ಮಿಯೋರ್ವ ಅಕ್ರಮ ಪ್ರವೇಶ ಮಾಡಿದ್ದೂ ಅಲ್ಲದೆ ದೇಗುಲದ ಆವರಣದಲ್ಲೇ ಮೂತ್ರವಿಸರ್ಜನೆ ಮಾಡಿದ್ದಾನೆ.
ಆತನ ಕೃತ್ಯವನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ವಿಚಾರಿಸಿದ್ದಾರೆ. ಈ ವೇಳೆ ಆತ ತನ್ನ ದುಷ್ಕೃತ್ಯವನ್ನು ಒಪ್ಪಿಕೊಂಡಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ದೌಡೌಯಿಸಿದ ಪೊಲೀಸರು ಕುಕೃತ್ಯವೆಸಗಿದ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಬಂಧಿತನನ್ನು 31 ವರ್ಷದ ಮೊಹಮದ್ ಜಾಫರ್ ಎಂದು ಗುರುತಿಸಲಾಗಿದೆ ಎಂದು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜಾಫರ್ನನ್ನು ಬಂಧಿಸಿದ್ದಾರೆ.
