ಮಂಡ್ಯ: ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ಹೃದಯಾಘಾತ; 9ನೇ ತರಗತಿ ವಿದ್ಯಾರ್ಥಿ ದಾರುಣ ಸಾ*ವು!

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಮೃತ ದುರ್ದೈವಿ. ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ಮಕ್ಕಳೊಂದಿಗೆ ಬಿಸಿಯೂಟ ಮಾಡುತ್ತಿದ್ದಾಗ ವೀರಮಣಿ ಏಕಾಏಕಿ ಮೂರ್ಛೆಹೋಗಿ ಕೆಳಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಶಿಕ್ಷಕರು ಆತನನ್ನು ಸ್ಥಳೀಯ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ, ಬಾಲಕನ ಸ್ಥಿತಿ ಗಂಭೀರವಾಗಿದ್ದ ಕಾರಣ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ದುರದೃಷ್ಟವಶಾತ್, ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ತಪಾಸಣೆ ನಡೆಸಿದ ವೈದ್ಯರು, ಬಾಲಕ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಶಾಲಾ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.