ಪುತ್ತೂರು: ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಮಾಡಿದ್ದ ಅಂತಾರಾಜ್ಯ ಕಳ್ಳ ಕಾಸರಗೋಡಿನಲ್ಲಿ ಅರೆಸ್ಟ್!

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಮೂಲದ ಅಂತಾರಾಜ್ಯ ಕಳ್ಳನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಚೇಸ್ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ. ಈತನಿಂದ ಕಳವು ಮಾಡಲಾಗಿದ್ದ ಕಾಣಿಕೆ ಡಬ್ಬಿ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್ ಕುಮಾರ ಬಿ. ಅವರು ನೀಡಿದ ದೂರಿನಂತೆ, ಆಗಸ್ಟ್ 25ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋದಾಗ ಹೊರಭಾಗದಲ್ಲಿದ್ದ ಕಾಣಿಕೆ ಡಬ್ಬಿ ನಾಪತ್ತೆಯಾಗಿತ್ತು. ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ, ಆಗಸ್ಟ್ 24ರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಕಾಣಿಕೆ ಡಬ್ಬಿಯನ್ನು ಕದ್ದು ಒಯ್ಯುತ್ತಿರುವುದು ಕಂಡುಬಂದಿತ್ತು. ಡಬ್ಬಿಯ ಮೌಲ್ಯ ₹2,500 ಹಾಗೂ ಅದರಲ್ಲಿದ್ದ ಕಾಣಿಕೆ ಹಣ ಸುಮಾರು ₹4,500 ಸೇರಿ ಒಟ್ಟು ನಷ್ಟದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಭಾಗಗಳಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಕೊನೆಗೆ ಬದಿಯಡ್ಕದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಸತೀಶನನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಸತೀಶನ ವಿರುದ್ಧ ಈಗಾಗಲೇ ಕೇರಳದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳವು ಪ್ರಕರಣವೂ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು ಉಪವಿಭಾಗದ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರ ನಿರ್ದೇಶನದಲ್ಲಿ ಹಾಗೂ ಪುತ್ತೂರು ಗ್ರಾಮಾಂತರ ಠಾಣೆಯ ಪ್ರಭಾರ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಮಾರ್ಗದರ್ಶನದಲ್ಲಿ, ಪಿಎಸ್ಐಗಳಾದ ಗುಣಪಾಲ ಜೆ., ಸುಷ್ಮಾ ಜಿ. ಭಂಡಾರಿ ಮತ್ತು ಸಿಬ್ಬಂದಿಗಳಾದ ರಮೇಶ್, ನಾಗರಾಜ, ಮಂಜುನಾಥ, ಆಕಾಶ್, ಕಾರ್ತಿಕ್, ಶರಣಪ್ಪ ಪಾಟೀಲ್, ಈರಣ್ಣ, ಹರಿಪ್ರಸಾದ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಿಡಿಆರ್ ವಿಭಾಗದ ಸಂಪತ್ ಮತ್ತು ದಿವಾಕರ್ ಅವರು ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.