ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿನಿಯಂತ್ರಣ ತಪ್ಪಿ ಫ್ಲೈಓವರ್ನಿಂದ ಕೆಳಕ್ಕೆ ಬಿದ್ದ ಕಾರು!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್ನಿಂದ ಕೆಳಕ್ಕೆ ಬಿದ್ದ ಪರಿಣಾಮ ಬೆಂಗಳೂರು ಮೂಲದ 32 ವರ್ಷದ ಮಹಿಳಾ ಟೆಕ್ಕಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘೋರ ಅಪಘಾತ ಸಂಭವಿಸಿದೆ. ಮಂಡ್ಯ ಕೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್ಪ್ರೆಸ್ವೇ ಫ್ಲೈಓವರ್ನಲ್ಲಿ ಈ ದುರಂತ ನಡೆದಿದೆ. ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಅಂಜನಾ (32) ಮೃತಪಟ್ಟ ಮಹಿಳೆ.

ಪೊಲೀಸರು ನೀಡಿದ ಮಾಹಿತಿಯಂತೆ, ಅಂಜನಾ ಅವರು ತಮ್ಮ ಪತಿಯೊಂದಿಗೆ ಬೆಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಮಂಡ್ಯದ ಉಮ್ಮಡಹಳ್ಳಿ ಗೇಟ್ ತಲುಪುತ್ತಿದ್ದಂತೆ ಅತಿವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಭೀಕರವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಫ್ಲೈಓವರ್ ಮೇಲಿಂದ ಕೆಳಗಿದ್ದ ಅಂಡರ್ಪಾಸ್ಗೆ ಹಾರಿ ಬಿದ್ದಿದೆ. ಅಪಘಾತದ ತೀವ್ರತೆಗೆ ಕಾರಿನ ಕಿಟಕಿಯಿಂದ ಹೊರಗೆ ಎಸೆಯಲ್ಪಟ್ಟ ಅಂಜನಾ ಅವರಿಗೆ ತಲೆ ಹಾಗೂ ದೇಹದ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಕಾರಿನಲ್ಲಿದ್ದ ಆಕೆಯ ಪತಿ ಹರೀಶ್ ಹಾಗೂ ಚಾಲಕ ನಿತಿನ್ ಕೂಡ ಗಂಭೀರವಾಗಿ ಗಾಯಗೊಂಡಿದ್ದರು.
ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ದಾಖಲಿಸಿದರಾದರೂ, ತೀವ್ರ ರಕ್ತಸ್ರಾವದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅಂಜನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಮಂಡ್ಯ ಕೇಂದ್ರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.