ಹಬ್ಬದ ಖುಷಿಯಲ್ಲಿ ಮನೆಗೆ ಬೀಗ ಹಾಕಿ ಹೊರಡ್ಬೇಡಿ – ಪೊಲೀಸ್ ಎಚ್ಚರಿಕೆ

ಬೆಂಗಳೂರು: ಇದು ಶಾಲಾ ಮಕ್ಕಳಿಗೆ ಬೇಸಿಗೆ ರಜೆಯ ಸಮಯ. ಜೊತೆಗೆ, ಹಬ್ಬ ಹರಿದಿನ ಎಂದು ಸಾಲು ರಜೆಗಳಿರುವ ಸಮಯ. ಈ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿ ಊರಿಗೆ ಅಥವಾ ಬೇರೆ ಕಡೆ ಪ್ರವಾಸ ತೆರಳುವವರಿಗೆ ಬೆಂಗಳೂರು ಪೊಲೀಸರು ಮಹತ್ವದ ಸಲಹೆ ಸೂಚನೆ ನೀಡಿದ್ದಾರೆ. ಅವುಗಳು ಏನೆಂಬುದು ಇಲ್ಲಿದೆ.
ಬೆಂಗಳೂರು, ಏಪ್ರಿಲ್ 9: ಬೇಸಗೆ ರಜೆಯ ಸಂದರ್ಭದಲ್ಲಿ ಬೆಂಗಳೂರುನಿವಾಸಿಗಳು ಮನೆಯ ಭದ್ರತೆ ಬಗ್ಗೆ ಸಾಕಷ್ಟು ಎಚ್ಚರದಿಂದ ಇರಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಸಲಹೆ ನೀಡಿದ್ದಾರೆ. ನಗರದಲ್ಲಿ ಇತ್ತೀಚೆಗೆ ನಡೆದ ಅಪರಾಧ ಕೃತ್ಯಗಳ ಮತ್ತು ಕಳ್ಳತನ ಪ್ರಕರಣಗಳ ಬಗ್ಗೆ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ ಅವರು, ಸಾರ್ವಜನಿಕರು ಏನೇನು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸಲಹೆಯನ್ನೂ ನೀಡಿದ್ದಾರೆ. ವಿಶೇಷವಾಗಿ, ಮನೆಗೆ ಬೇಗ ಹಾಕಿ ಊರಿಗೆ ಅಥವಾ ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರು ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ದೀರ್ಘ ಅವಧಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಮನೆಯಲ್ಲಿ ಬೆಳೆಬಾಳುವ ವಸ್ತುಗಳನ್ನು ಇಡಬೇಡಿ. ಅವುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್ಗಳಲ್ಲಿ ಇಡುವುದು ಸೂಕ್ತ ಎಂದು ಅವರ ಸಲಹೆ ನೀಡಿದ್ದಾರೆ.
ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ
ಮನೆಗೆ ಗುಣಮಟ್ಟದ ಬೀಗ ಅಳವಡಿಸಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಿ. ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಎಲ್ಲೋ ಇಟ್ಟು ಹೋಗುವ ಅಭ್ಯಾಸ ಮಾಡಬೇಡಿ. ಒಂದಕ್ಕಿಂತ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ತೆರಳಿ. ಇಂಥ ಸಂದರ್ಭದಲ್ಲಿ ಆ ಪ್ರದೇಶದಲ್ಲಿ ಗಸ್ತು ನಡೆಸುವುದು ಪೊಲೀಸರಿಗೂ ಸುಲಭವಾಗುತ್ತದೆ ಎಂದು ದಯಾನಂದ್ ಹೇಳಿದ್ದಾರೆ.