ವೃದ್ಧೆಯ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿ ಅತ್ಯಾಚಾ*ರಕ್ಕೆ ಯತ್ನಿಸಿದ ಕಾಮುಕ ಬಂಧನ!

ಹೊಸದೆಹಲಿ: ಪೂರ್ವ ದೆಹಲಿಯ ತ್ರಿಲೋಕಪುರಿ ಪ್ರದೇಶದಲ್ಲಿ ಬುದ್ಧಿಮಾಂದ್ಯ ವೃದ್ಧೆಯೊಬ್ಬರ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಇಟ್ಟಿಗೆಯಿಂದ ಜಜ್ಜಿ ವಿಕೃತಿ ಮೆರೆದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿದಂತೆ ೨೮ ವರ್ಷದ ವಿಷ್ಣು ಅಲಿಯಾಸ್ ವಿಕ್ಕಿ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧನದ ಸಮಯದಲ್ಲಿ ಆರೋಪಿ ತೀವ್ರ ನಶೆಯಲ್ಲಿದ್ದ ಪತ್ತೆಯಾಗಿದ್ದು, ಈತ ಮಾದಕ ವ್ಯಸನಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ಧೆ
ಜೂನ್ ೧೨ರ ಶುಕ್ರವಾರ ಮುಂಜಾನೆ ಸುಮಾರು ೬:೩೦ರ ವೇಳೆಗೆ ಮಯೂರ್ ವಿಹಾರ್ ಪೊಲೀಸ್ ಠಾಣೆಗೆ ಸಾರ್ವಜನಿಕರಿಂದ ಕರೆ ಬಂದಿತ್ತು. ತ್ರಿಲೋಕಪುರಿ ಬಳಿ ಗಂಭೀರವಾಗಿ ಗಾಯಗೊಂಡ ಮಹಿಳೆಯೊಬ್ಬರು ಬಿದ್ದಿರುವುದಾಗಿ ರಿಕ್ಷಾ ಚಾಲಕರೊಬ್ಬರು ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಸ್ಥಳೀಯರು ಆಕೆಯನ್ನು ಅಂಬುಲೆನ್ಸ್ ಮೂಲಕ ಗುರು ತೇಗ್ ಬಹದ್ದೂರ್ (GTB) ಆಸ್ಪತ್ರೆಗೆ ದಾಖಲಿಸಿದ್ದರು. ಗಾಯಾಳು ಮಹಿಳೆ ಬುದ್ಧಿಮಾಂದ್ಯರಾಗಿದ್ದು, ಅದೇ ಪ್ರದೇಶದಲ್ಲಿ ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ವೈದ್ಯಕೀಯ ವರದಿಗಳ ಪ್ರಕಾರ, ಮಹಿಳೆಯ ಮುಖ ಹಾಗೂ ದೇಹದ ಮೇಲೆ ತೀವ್ರವಾದ ಗಾಯದ ಗುರುತುಗಳಾಗಿವೆ. ಪ್ರಾಥಮಿಕ ವರದಿಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಡದಿದ್ದರೂ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಯತ್ನದ ಮೊಕದ್ದಮೆಯನ್ನು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ದೃಶ್ಯ ಕಂಡು ಸ್ಥಳೀಯರ ಆಕ್ರೋಶ
ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಆರೋಪಿಯ ಭೀಕರ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿ ವೃದ್ಧೆಯ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ ಯತ್ನಿಸುತ್ತಿರುವುದು ಅದರಲ್ಲಿ ಸ್ಪಷ್ಟವಾಗಿದೆ.
“ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಮಾನವೀಯತೆಯೇ ಇಲ್ಲದಂತೆ ಈ ಕೃತ್ಯ ಎಸಗಲಾಗಿದೆ” ಎಂದು ಸ್ಥಳೀಯ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ ಸಂತ್ರಸ್ತೆ ಮುಸ್ಲಿಂ ಸಮುದಾಯಕ್ಕೆ ಸೇರಿದವಳಾಗಿದ್ದರಿಂದ ಪೊಲೀಸರು ಆರಂಭದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿರುವ ಕೆಲವು ನಿವಾಸಿಗಳು, “ಕೋಡಾ (Khoda) ಘಟನೆಯಲ್ಲಿ ಆದಂತೆ ಈ ಕಾಮುಕನಿಗೂ ಕಠಿಣ ಶಿಕ್ಷೆಯಾಗಬೇಕು. ಕೊಲೆಗೆ ಕೊಲೆಯೇ ಉತ್ತರವಾಗಬೇಕು” ಎಂದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ತನಿಖೆ ಚುರುಕುಗೊಳಿಸಿದ ಪೊಲೀಸರು
ಸಂತ್ರಸ್ತೆ ಸದ್ಯ ಪ್ರಜ್ಞಾವಸ್ಥೆಯಲ್ಲಿದ್ದಾರಾದರೂ, ಬುದ್ಧಿಮಾಂದ್ಯತೆಯಿಂದಾಗಿ ಘಟನೆಯ ಬಗ್ಗೆ ಸ್ಪಷ್ಟ ಹೇಳಿಕೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (FSL) ಮತ್ತು ಅಪರಾಧ ವಿಭಾಗದ ತಂಡಗಳು ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ ೧೧೦ರ (ಸಾಪರಾಧ ನರಹತ್ಯೆ ಯತ್ನ) ಅಡಿಯಲ್ಲಿ ಮಯೂರ್ ವಿಹಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೆಹಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
