ಅಜಿತ್ ಪವಾರ್ ಸಾ*ವು ಆಕಸ್ಮಿಕವೋ ಅಥವಾ ಸಂಚೋ?: ತನಿಖೆಗೆ ಸುನೇತ್ರಾ ಪವಾರ್ ಆಗ್ರಹ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಎನ್ಸಿಪಿ ನಾಯಕಿ ಸುನೇತ್ರಾ ಪವಾರ್ ಮಂಗಳವಾರ ತಮ್ಮಪತಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ದುರಂತದ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ಎಲ್ಲರಿಗೂ ಉತ್ತರ ಸಿಗಬೇಕು ಮತ್ತು ಯಾರಾದರೂ ತಪ್ಪಿತಸ್ಥರಾಗಿದ್ದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹೇಳಿದ್ದಾರೆ.
ಬಾರಾಮತಿ ವಿಮಾನ ದುರಂತದ ಬಗ್ಗೆ ಇದೇ ಮೊದಲ ಬಾರಿಗೆ ಮೌನ ಮುರಿದ ಸುನೇತ್ರಾ ಪವಾರ್, ಈ ಘಟನೆ ಬಗ್ಗೆ ನನ್ನ ಮನಸ್ಸಿನಲ್ಲಿ ಹಲವು ಪ್ರಶ್ನೆಗಳಿವೆ. ಈ ಬಗ್ಗೆ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಮೂಲಕ ಅನುಮಾನಗಳನ್ನು ನಿವಾರಿಸಬೇಕಾಗಿದೆ ಎಂದು ಹೇಳಿದರು.

ಘಟನೆಯ ಬಗ್ಗೆ ಮುಕ್ತ ಮತ್ತು ನ್ಯಾಯಯುತ ತನಿಖೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ನಮ್ಮ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಈ ಕುರಿತು ತನಿಖೆ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್ ವೇಳೆ ಪತನಕ್ಕೀಡಾಗಿತ್ತು. ಈ ಘಟನೆಯಲ್ಲಿ ಅಜಿತ್ ಪವಾರ್ ಸೇರಿ ಐವರು ಮೃತಪಟ್ಟಿದ್ದರು.