ನಮ್ಮ ಮೆಟ್ರೋದಲ್ಲಿ ಅಮೂಲ್ ಮಳಿಗೆ: ನಂದಿನಿ ಬ್ರ್ಯಾಂಡ್ ಕಡೆಗಣನೆಗೆ ಜೆಡಿಎಸ್ ತೀವ್ರ ವಿರೋಧ!

ಬೆಂಗಳೂರು : ಬೆಂಗಳೂರು ನಗರದಲ್ಲಿ ಜೀವನಾಡಿಯಾಗಿರುವ ಮೆಟ್ರೋ ನಿಲ್ದಾಣದಲ್ಲಿ ಮಳಿಗೆಗಳನ್ನು ಪ್ರಾರಂಭಿಸಲು ಬಿಎಂಆರ್ ಸಿಎಲ್ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿನ ಹಲವಾರು ಮೆಟ್ರೋ ನಿಲ್ದಾಣದಲ್ಲಿ ನಾನಾ ರೀತಿಯ ಮಳಿಗೆಗಳು ಪ್ರಾರಂಭಗೊಳ್ಳುತ್ತಿವೆ. ಆದರೆ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇದೀಗ ತಲೆ ಎತ್ತುತ್ತಿರುವ ಅಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆ ಪ್ರಾರಂಭ ಸಂಬಂಧ ಅಪಸ್ವರ ಎದ್ದಿದೆ.
ರಾಜ್ಯದ ಪ್ರತಿಷ್ಠಿತ ನಂದಿನ ಬ್ರ್ಯಾಂಡ್ ಬಿಟ್ಟು ಹೊರ ರಾಜ್ಯದ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆ ಪ್ರಾರಂಭವಾಗಿರುವುದಕ್ಕೆ ಜಾತ್ಯಾತೀತ ಜನತಾದಳ ವಿರೋಧ ವ್ಯಕ್ತಪಡಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಸಂಬಂಧ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಾಗ ನಮ್ಮ ರೈತರು ಮತ್ತು ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರ್ಯಾಂಡ್ ಅನ್ನು ತನ್ನ ಪ್ರಚಾರಕ್ಕೆ ಬಳಸಿ, ಇದೀಗ ನೆರೆ ರಾಜ್ಯದ ಹಾಲಿನ ಉತ್ಪನ್ನಗಳಿಗೆ ಮಣೆ ಹಾಕಿರುವುದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂದು ಕಿಡಿಕಾರಿದೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಮಿಷನ್ ಆಸೆಗಾಗಿ ಹೊರ ರಾಜ್ಯದ ಹಾಲಿನ ಉತ್ಪನ್ನಗಳಿಗೆ ರತ್ನ ಕಂಬಳಿ ಹಾಸಿ ಬರಮಾಡಿಕೊಂಡಿದೆ. ಇದನ್ನು ತಕ್ಷಣವೇ ನಿಲ್ಲಿಸಿ, ರಾಜ್ಯದ ರೈತರ ಹಿತಾಸಕ್ತಿಗೆ ಅನುಗುಣವಾಗಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಆಗ್ರಹಿಸಿದೆ.
ಜೆಡಿಎಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಹೇಳಿಕೆ ಈ ರೀತಿಯಲ್ಲಿದೆ.
ಕಮಿಷನ್ ಆಸೆಗೆ ಸ್ವಾಭಿಮಾನ ಮಾರಿಕೊಂಡ @DKShivakumar!, ಡೂಪ್ಲಿಕೇಟ್ ಸಿಎಂ ಡಿಕೆಶಿಯ ನವರಂಗಿ ಆಟ ಮತ್ತೊಮ್ಮೆ ಬಯಲಾಗಿದೆ. ಚುನಾವಣೆಗೂ ಮುಂಚೆ #SaveNandini, ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಪುಂಗೀ ಬಿಡುತ್ತಿದ್ದ ಡಿಕೆಶಿ, ಕಮಿಷನ್ ಆಸೆಗೆ ಇಂದು ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ಮಣೆ ಹಾಕಿದ್ದಾರೆ.
ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗೆ ಅವಕಾಶ ನೀಡಲಾಗಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ ಅನ್ನು ತನ್ನ ಪ್ರಚಾರಕ್ಕೆ ಬಳಸಿಕೊಂಡ @INCKarnataka ಅಧಿಕಾರಕ್ಕೆ ಬಂದ ಬಳಿಕ ನಂದಿನಿಯನ್ನು ಮರೆತು, ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ರತ್ನ ಕಂಬಳಿ ಹಾಸಿದೆ.
ನಂದಿನಿ ಹಾಲಿನ ಉತ್ಪನ್ನಗಳಿಗೆ ಸ್ಪರ್ಧಾತ್ಮಕವಾಗಿ ಮಾರುಕಟ್ಟೆ ಸೃಷ್ಟಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ಕನ್ನಡಿಗರ ಹೆಮ್ಮೆಯ ಬ್ರಾಂಡ್ “ನಂದಿನಿ”ಯ ಹಿತಾಸಕ್ತಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದೆ. ಇದನ್ನು ತಕ್ಷಣವೇ ನಿಲ್ಲಿಸದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಎಲ್ಲೆಲ್ಲಿ ಮಳಿಗೆ ಸ್ಥಾಪನೆ
ಅಮೂಲ್ ರಿಟೈಲ್ ಕಿಯೋಸ್ಕ್ ಅನ್ನು 10 ಮೆಟ್ರೋ ನಿಲ್ದಾಣದಲ್ಲಿ ಸ್ಥಾಪಿಸಲು ಬಿಎಂಆರ್ ಸಿಎಲ್ ಜತೆ ಒಪ್ಪಂದ ಮಾಡಿಕೊಂಡಿದೆ. ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬಿನ್ನಿಗಾನಹಳ್ಳಿ, ಟ್ರಿನಿಟಿ, ಸರ್ ಎಂ ವಿಶ್ವೇಶ್ವರಯ್ಯ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್, ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿಯಲ್ಲಿ ಮಳಿಗೆಗಳನ್ನು ಸ್ಥಾಪಿಸಲು ಮುಂದಾಗಿದೆ. ಇಲ್ಲಿ ಹಾಲಿನ ಉತ್ಪನ್ನಗಳು, ಚಾಕೋಲೆಟ್, ಐಸ್ ಕ್ರೀಂ ಮುಂತಾದವುಗಳು ದೊರೆಯಲಿವೆ