ಬಕ್ರೀದ್ ಹಿನ್ನಲೆಯಲ್ಲಿ ಗೋವು, ಒಂಟೆ ಸಾಗಣೆ ನಿಷೇಧ: ಮೇ 31 ರಿಂದ ತಪಾಸಣಾ ಕೇಂದ್ರಗಳು ಕಾರ್ಯನಿರ್ವಹಣೆ

ಬೆಂಗಳೂರು: ಅನಧಿಕೃತವಾಗಿ ಒಂಟೆ, ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಈ ಸಂಬಂಧ ಬೆಂಗಳೂರು ಜಿಲ್ಲಾಡಳಿತ ವ್ಯಾಪ್ತಿಯಲ್ಲಿ ಗೋವು-ಒಂಟೆ ಸಾಗಣೆ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಮತ್ತು ನಿಯಮಗಳನ್ನು ಪಾಲಿಸದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರಕಾರ ಎಚ್ಚರಿಕೆ ನೀಡಿದೆ.
ಮಂಗಳವಾರ ಈ ಕುರಿತು ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಅಧ್ಯಕ್ಷತೆಯಲ್ಲಿ ಬಕ್ರೀದ್ ಹಬ್ಬದಂದು ಒಂಟೆ, ಗೋವುಗಳ ಸಾಗಣಿಕೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ಚರ್ಚಿಸಲಾಯಿತು.
ಪ್ರಮುಖವಾಗಿ ಬೆಂಗಳೂರು ನಗರದ ಹೊರವಲಯದ ಹೆದ್ದಾರಿಗಳಲ್ಲಿ ಮೈಸೂರು ರಸ್ತೆ (ಕುಂಬಳಗೊಡು), ತುಮಕೂರು ರಸ್ತೆ (ಎಕ್ಸಿಬ್ಯೂಷನ್ ಕೇಂದ್ರ), ಮಾಗಡಿ ರಸ್ತೆ (ತಾವರೆಕೆರೆ), ಹೊಸೂರು ರಸ್ತೆ (ಅತ್ತಿ ಬೆಲೆ), ಹಳೆ ಮದ್ರಾಸ್ ರೋಡ್ (ಹೊಸಕೋಟೆ ಹತ್ತಿರ) ಒಟ್ಟು 5 ತಪಾಸಣಾ ಕೇಂದ್ರಗಳನ್ನು ಸಾರಿಗೆ ಇಲಾಖೆಯ ನೇತೃತ್ವದಲ್ಲಿ ನಿರ್ಮಿಸಿ ಮೇ 31 ರಿಂದ ಜೂನ್ 7 ರವರೆಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಹೊರ ರಾಜ್ಯಗಳಿಂದ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಕಳ್ಳ ಸಾಗಾಣಿಕೆ ಮಾಡುವುದು ಅಪರಾಧವಾಗಿದ್ದು, ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಬಾರದು. ನಿಯಮ ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅವರು ಸಭೆಯಲ್ಲಿ ಅವರು ಎಚ್ಚರಿಕೆ ನೀಡಿದರು.
ಬೆಂಗಳೂರು ನಗರಕ್ಕೆ ಆಗಮಿಸುವ ಸಾಗಾಣಿಕೆ ವಾಹನಗಳನ್ನು ತಪಾಸಣೆ ನಡೆಸಿ ಅನಧೀಕೃತ ಗೋವು, ಒಂಟೆಗಳ ಸಾಗಾಣಿಕೆ ಕಂಡುಬಂದಲ್ಲಿ ವಾಹನಗಳನ್ನು ವಶಪಡಿಸಿಕೊಂಡು ಪೊಲೀಸ್, RTO ಅಧಿಕಾರಿಗಳು, ಪಶುಪಾಲನಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಅವುಗಳನ್ನು ರಕ್ಷಣೆ ಮಾಡಿ ಸಮೀಪದಲ್ಲಿರುವ ಗೋಶಾಲೆಗಳಲ್ಲಿ ಸೇರಿಸಲು ಕ್ರಮಕೈಗೊಳ್ಳಬೇಕು ಮತ್ತು ಸಂಬಂಧಿತ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅದೇ ರೀತಿ, ಹಬ್ಬದ ಸಂದರ್ಭಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕದಂತೆ ಎಚ್ಚರವಹಿಸಬೇಕು. ಕಸ ವಿಲೇವಾರಿ ವಾಹನಗಳಿಗೆ ತ್ಯಾಜ್ಯ ನೀಡಬೇಕು. ಪ್ರಾಣಿ ವಧೆಯಿಂದ ಉತ್ಪತ್ತಿಯಾಗುವ ತಾಜ್ಯ ವಿಲೇವಾರಿಯನ್ನು ಸುಸೂತ್ರವಾಗಿ ನಿರ್ವಹಣೆ ಮಾಡಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಬಿಬಿಎಂಪಿಯ (ಪಶುಪಾಲನೆ) ಜಂಟಿ ನಿರ್ದೇಶಕ ಡಾ.ಚಂದ್ರಯ್ಯ.ಟಿ, ಸಂಗೋಪನಾ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಹಾಯವಾಣಿ:
ಕಾನೂನು ಬಾಹಿರವಾಗಿ ಯಾರಾದರೂ ಒಂಟೆ, ಗೋಹತ್ಯೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಬಿಬಿಎಂಪಿಯ ಸಹಾಯವಾಣಿ 1533 ಗೆ ಕರೆ ಮಾಡಿ ದೂರು ನೀಡಬಹುದು ಎಂದು ಬೆಂಗಳೂರು ಜಿಲ್ಲಾಡಳಿತ ತಿಳಿಸಿದೆ.