ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ: ಪ್ರತಿಭಟನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.
ಕರ್ನಾಟಕ ಕಾರ್ಮಿಕ ವೇದಿಕೆ ಮತ್ತು ನೇಟಿವ್ ಎಂಪವರಿಂಗ್ ಆ್ಯಂಡ್ ಎಕ್ವಿಪಿಂಗ್ ಟೀಮ್ ಫಾರ್ ಹೋಪ್ ಆ್ಯಂಡ್ ಇಂಟರಾಕ್ಷನ್ ಎಂಬ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿ ಅರ್ಜಿ ಇತ್ಯರ್ಥಪಡಿಸಿತು.
ಆದೇಶ ಉಲ್ಲಂಘಿಸಿದರೆ ಕ್ರಮದ ಎಚ್ಚರಿಕೆ: ಪ್ರತಿಭಟನೆ ಶಾತಿಯುತವಾಗಿರದೇ ಇದ್ದಲ್ಲಿ ಪೊಲೀಸ್ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮಕ್ಕೆ ಮುಂದಾಗಬಹುದು. ಜೊತೆಗೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ಇನ್ನೊಂದು ಪೀಠ ಈ ಹಿಂದೆ ನೀಡಿರುವ ಆದೇಶವನ್ನೂ ಉಲ್ಲಂಘಿಸಿದ್ದಲ್ಲಿ ರಾಜ್ಯ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಕ್ರಮಕ್ಕೆ ಮುಂದಾಗಬಹುದು ಎಂದು ಪೀಠ ತಿಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವುದಕ್ಕಾಗಿ ಬೆಳ್ತಂಗಡಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಇದಕ್ಕೆ ಅನುಮತಿ ಲಭ್ಯವಾಗಿತ್ತು. ಮರುದಿನ ಕೆಲವು ವಕೀಲರಿಂದ ಆಕ್ಷೇಪಣೆಗಳು ಬಂದ ಹಿನ್ನೆಲೆಯಲ್ಲಿ ನೀಡಿದ್ದ ಅನುಮತಿ ಹಿಂಪಡೆಯಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.
ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಅದನ್ನು ತಡೆಯುವುದಕ್ಕೆ ಸರ್ಕಾರ ಮುಂದಾಗಬಾರದು, ಆಯೋಜಕರು ಶಾಂತಿಯುತ ಪ್ರತಿಭಟನೆ ನಡೆಸಲಿದ್ದು, ಯಾವುದೇ ಕಾನೂನುಗಳು ಉಲ್ಲಂಘನೆಯಾದಲ್ಲಿ ಪೊಲೀಸರು ಕಾನೂನು ಪ್ರಕಾರ ಕ್ರಮಕ್ಕೆ ಮುಂದಾಗಬಹುದು ಎಂದು ತಿಳಿಸಿದರು.
ವಾದ ಆಲಿಸಿ ದಾಖಲೆಗಳನ್ನು ಪರಿಶೀಲಿಸಿದ ಪೀಠ, ಅರ್ಜಿದಾರರು ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ಖುಲಾಸೆಯನ್ನು ಖಂಡಿಸಿ ಮತ್ತು ಖುಲಾಸೆ ಕುರಿತು ಪರಿಶೀಲನಾ ಸಮಿತಿ ರಚನೆ ಮಾಡುವಂತೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂಬ ಅಂಶ ಗೊತ್ತಾಗುತ್ತದೆ. ಆದರೆ ಆರೋಪರಹಿತ ಹಾಗೂ ಮಾನಹಾನಿಕರ ಹೇಳಿಕೆಗಳ ನೀಡಿದಲ್ಲಿ ಕ್ರಮಕ್ಕೆ ಮುಂದಾಗಬಹುದು ಎಂದು ಪೀಠ ತಿಳಿಸಿದೆ.
ಖಾಸಗಿ ಕಾಲೇಜಿನಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದ ಬೆಳ್ತಂಗಡಿಯ ವಿದ್ಯಾರ್ಥಿಯನ್ನು 2012ರಲ್ಲಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ರಾಜ್ಯ ಪೊಲೀಸರು, ಸಿಬಿಐ ಪೊಲೀಸರು ತನಿಖೆ ನಡೆಸಿದ್ದರೂ ಕೊಲೆ ಆರೋಪಿ ಯಾರು ಎಂಬುದನ್ನು ಪತ್ತೆ ಹಚ್ಚಲಾಗಿರಲಿಲ್ಲ. ಪೊಲೀಸರು ಆರೋಪಿಸಿದ್ದ ವ್ಯಕ್ತಿಯನ್ನು ನ್ಯಾಯಾಲಯ ನಿರಪರಾಧಿ ಎಂಬುದಾಗಿ ಆದೇಶಿಸಿತ್ತು. ಇದನ್ನು ಖಂಡಿಸಿ ಮತ್ತೆ ಪ್ರತಿಭಟನೆಗಳು ಪ್ರಾರಂಭವಾಗಿವೆ.