Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು: ಶಕ್ತಿ ಯೋಜನೆ ಮಹಿಳೆಯರಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಜಾರಿಗೆ ಬರಲಿದೆ ಉಚಿತ ‘ಸ್ಮಾರ್ಟ್ ಕಾರ್ಡ್’!

Spread the love

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ಶೀಘ್ರದಲ್ಲೇ ‘ಸ್ಮಾರ್ಟ್ ಕಾರ್ಡ್’ ವ್ಯವಸ್ಥೆ ಜಾರಿಯಾಗಲಿದೆ. ಈ ಹೊಸ ವ್ಯವಸ್ಥೆ ಜಾರಿಗೆ ಬಂದ ಬಳಿಕ ಬಸ್ ಪ್ರಯಾಣದ ವೇಳೆ ಆಧಾರ್ ಕಾರ್ಡ್ ತೋರಿಸುವ ತೊಂದರೆ ತಪ್ಪಲಿದೆ.

ರಾಜ್ಯದ ಮೂರು ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ಸರ್ಕಾರ ವಿತರಿಸಲಿದ್ದು, ಇದರಿಂದ ದಿನನಿತ್ಯ ನಿರ್ವಾಹಕರಿಗೆ ಭೌತಿಕ ಗುರುತಿನ ಚೀಟಿ ತೋರಿಸುವ ಗೊಂದಲಗಳು ನಿವಾರಣೆಯಾಗಲಿದೆ.

ಸೋಮವಾರ ಸಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೈರತಿ ಸುರೇಶ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಹೇಳಿದರು.

ರಾಜ್ಯದ ಮೂರು ಕೋಟಿಗೂ ಅಧಿಕ ಜನರಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಮಹಿಳೆಯರಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಪುರುಷರು ಮೆಟ್ರೋ ಕಾರ್ಡ್ ಮಾದರಿಯಲ್ಲಿ ಶುಲ್ಕ ಪಾವತಿಸಿ ಕಾರ್ಡ್ ಪಡೆಯಬಹುದಾಗಿದೆ. ಕಾರ್ಡ್‌ನಲ್ಲಿರುವ ಮೊತ್ತ ಮುಗಿದ ಬಳಿಕ ಮರುರಿಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯೂ ಇರಲಿದೆ ಎಂದು ಮಾಹಿತಿ ನೀಡಿದರು.

ಮೂರು ಕೋಟಿಗೂ ಹೆಚ್ಚು ಸ್ಮಾರ್ಟ್ ಕಾರ್ಡ್‌ಗಳನ್ನು ಮುದ್ರಿಸಬೇಕಿರುವ ಹಿನ್ನೆಲೆಯಲ್ಲಿ ಸರ್ಕಾರ ಟೆಂಡರ್ ಆಹ್ವಾನಿಸಲು ಸಿದ್ಧತೆ ನಡೆಸಿದೆ. ಪೈಲಟ್ ಯೋಜನೆಯಡಿ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವಿತರಣೆ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಸಚಿವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮುಖ್ಯ ಕಚೇರಿಗೆ ಭೇಟಿ ನೀಡಿ, ಕೆಎಸ್‌ಆರ್‌ಟಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಸಂಸ್ಥೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಇಲಾಖೆಯ ಕಾರ್ಯವೈಖರಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಸಚಿವರು ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನಜೀವನವನ್ನು ಉತ್ತಮಗೊಳಿಸಿವೆ. ಶಕ್ತಿ ಯೋಜನೆಯಿಂದ ಕೋಟ್ಯಂತರ ಮಹಿಳೆಯರು ಪ್ರಯೋಜನ ಪಡೆಯುತ್ತಿದ್ದು, ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಸಂಖ್ಯೆ ಸುಮಾರು 40 ಶೇಕಡಾ ಹೆಚ್ಚಾಗಿದೆ ಎಂದು ತಿಳಿಸಿದರು.

ಪ್ರಸ್ತುತ ‘ಶಕ್ತಿ’ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿಗಳನ್ನು ತೋರಿಸಬೇಕಾಗಿರುವುದರಿಂದ ಹಲವಾರು ಬಾರಿ ಗೊಂದಲ ಹಾಗೂ ವಿಳಂಬ ಉಂಟಾಗುತ್ತಿದೆ.

ವಿಶೇಷವಾಗಿ ಪೀಕ್ ಅವರ್‌ಗಳಲ್ಲಿ ಬಸ್ ಹತ್ತುವಾಗ ಪರ್ಸ್‌ನಲ್ಲಿ ಆಧಾರ್ ಕಾರ್ಡ್ ಹುಡುಕುವ ಪರಿಸ್ಥಿತಿ ಎದುರಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ರಾಜ್ಯ ಸರ್ಕಾರ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರುತ್ತಿದ್ದು, ಈ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿಗೆ ಬಂದರೆ ಮಹಿಳೆಯರ ಬಸ್ ಪ್ರಯಾಣ ಇನ್ನಷ್ಟು ಸುಲಭವಾಗಲಿದೆ.


Spread the love
Share:

administrator

Leave a Reply

Your email address will not be published. Required fields are marked *