ಬೆಂಗಳೂರು ವಿದ್ಯಾರ್ಥಿನಿಯರ ನಾಪತ್ತೆ ಕೇಸ್: ಎಂಟು ತಿಂಗಳಾದರೂ ಸಿಗದ ಸುಳಿವು; ಸಿಐಡಿ ತನಿಖೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರವು ಅಧಿಕೃತವಾಗಿ ಸಿಐಡಿ ತನಿಖೆಗೆ ಒಪ್ಪಿಸಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ನಾಪತ್ತೆಯಾದ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ, ಸ್ಥಳೀಯ ಪೊಲೀಸರ ತನಿಖೆಯ ಪ್ರಗತಿಯಿಂದ ಅಸಮಾಧಾನಗೊಂಡ ಪೋಷಕರ ಮನವಿಗೆ ಸ್ಪಂದಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ವಿದ್ಯಾರಣ್ಯಪುರ ನಿವಾಸಿಗಳಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಆಕೆಯ ಜ್ಯೂನಿಯರ್ ತೇಜಸ್ವಿನಿ ಕಳೆದ ಜನವರಿ 31 ರಂದು ನಿಗೂಢವಾಗಿ ಕಣ್ಮರೆಯಾಗಿದ್ದರು. ಅಂದು ಎಂದಿನಂತೆ ಮನೆಯಿಂದ ಹೊರಟಿದ್ದ ಈ ಇಬ್ಬರು ವಿದ್ಯಾರ್ಥಿನಿಯರು ರಾತ್ರಿಯಾದರೂ ಮನೆಗೆ ಮರಳದಿದ್ದಾಗ ಆತಂಕಗೊಂಡ ಪೋಷಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಂದಿನಿಂದ ಈವರೆಗೂ ವಿದ್ಯಾರ್ಥಿನಿಯರ ಪತ್ತೆಗಾಗಿ ಪೊಲೀಸರು ನಡೆಸಿದ ಸತತ ಪ್ರಯತ್ನಗಳು ಫಲ ನೀಡಿಲ್ಲ.
ಈ ಪ್ರಕರಣದಲ್ಲಿ ಪೊಲೀಸರಿಗೆ ಎದುರಾದ ಅತಿದೊಡ್ಡ ಸವಾಲೆಂದರೆ ವಿದ್ಯಾರ್ಥಿನಿಯರು ಯಾವುದೇ ತಾಂತ್ರಿಕ ಕುರುಹುಗಳನ್ನು ಬಿಟ್ಟು ಹೋಗದಿರುವುದು. ತನಿಖೆಯ ವೇಳೆ ಅವರು ಯಾವುದೇ ಮೊಬೈಲ್ ಫೋನ್ ಅಥವಾ ಎಟಿಎಂ ಕಾರ್ಡ್ಗಳನ್ನು ಬಳಸುತ್ತಿಲ್ಲ ಎಂಬುದು ದೃಢಪಟ್ಟಿದೆ. ಆದರೂ, ಅವರು ಹೋಗುವಾಗ ತಮ್ಮ ಆಧಾರ್ ಕಾರ್ಡ್ಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಎಂಟು ತಿಂಗಳಿನಿಂದ ಅವರು ತಮ್ಮ ಕುಟುಂಬದ ಸದಸ್ಯರನ್ನಾಗಲಿ ಅಥವಾ ಸ್ನೇಹಿತರನ್ನಾಗಲಿ ಯಾವುದೇ ರೀತಿಯಲ್ಲಿ ಸಂಪರ್ಕಿಸಿಲ್ಲದಿರುವುದು ತನಿಖಾ ಸಂಸ್ಥೆಗಳನ್ನು ದಿಕ್ಕುಗಾಣಿಸಿದೆ.
ಆರಂಭದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ಸುಳಿವು ಆಧರಿಸಿ ತನಿಖೆ ತೀವ್ರಗೊಳಿಸಲಾಗಿತ್ತು. ವಿದ್ಯಾರಣ್ಯಪುರ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಮುಂಬೈ, ಚೆನ್ನೈ, ಕೊಯಮತ್ತೂರು, ದೆಹಲಿ, ಕಾಶಿ ಹಾಗೂ ಕೇರಳ ಸೇರಿದಂತೆ ದೇಶದ ಸುಮಾರು 100ಕ್ಕೂ ಹೆಚ್ಚು ಸಂಭಾವ್ಯ ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೆ, ಈ ವ್ಯಾಪಕ ಕಾರ್ಯಾಚರಣೆಯ ನಂತರವೂ ಯಾವುದೇ ಖಚಿತ ಮಾಹಿತಿ ಲಭ್ಯವಾಗಿರಲಿಲ್ಲ. ಇದರಿಂದ ಕಂಗೆಟ್ಟ ಪೋಷಕರು ಹೈಕೋರ್ಟ್ನಲ್ಲಿ ‘ಹೇಬಿಯಸ್ ಕಾರ್ಪಸ್’ ಅರ್ಜಿ ಸಲ್ಲಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದರು.
ಪ್ರಕರಣದ ಗಂಭೀರತೆ ಮತ್ತು ಪೋಷಕರ ಆತಂಕವನ್ನು ಪರಿಗಣಿಸಿರುವ ಸರ್ಕಾರ, ಈಗ ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವರ್ಗಾಯಿಸಿ ಆದೇಶಿಸಿದೆ. ಈಗಾಗಲೇ ಸ್ಥಳೀಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಕಡತಗಳು ಮತ್ತು ಮಹತ್ವದ ದಾಖಲೆಗಳನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈಗ ಸಿಐಡಿಯ ವಿಶೇಷ ತನಿಖಾ ತಂಡವು ಈ ನಿಗೂಢ ನಾಪತ್ತೆ ಪ್ರಕರಣವನ್ನು ಹೊಸ ದೃಷ್ಟಿಕೋನದಲ್ಲಿ ಕೈಗೆತ್ತಿಕೊಂಡಿದ್ದು, ಶೀಘ್ರದಲ್ಲೇ ಈ ಕಗ್ಗಂಟನ್ನು ಭೇದಿಸುವ ವಿಶ್ವಾಸ ವ್ಯಕ್ತಪಡಿಸಿದೆ.