ಮಕ್ಕಳ ಆರೈಕೆ ಕೇಂದ್ರ ನಿಷ್ಕ್ರಿಯ; NICUನಲ್ಲಿ ವಾರ್ಮರ್ಗೆ ಇಬ್ಬರು ನವಜಾತ ಶಿಶುಗಳು

ಮೈಸೂರು: ರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆ ಇದೀಗ ಅವ್ಯವಸ್ಥೆಗಳ ಆಗರವಾಗಿದೆ. ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳ ಆರೈಕೆ ಕೇಂದ್ರ ಬಹುತೇಕ ನಿಷ್ಕ್ರಿಯಗೊಂಡಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPCR) ಅಧ್ಯಕ್ಷ ಶಶಿಧರ್ ಕೊಸಂಬೆ ಅವರು ಗುರುವಾರ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಮಕ್ಕಳ ಆರೈಕೆ ಕೇಂದ್ರ ಒಂದು ಮಗುವೂ ದಾಖಲಾಗದ ವಿಚಾರ ತಿಳಿದು ಅಧಿಕಾರಿಗಳ ವಿರುದ್ದ ಗರಂ ಆದರು.
ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ವೈದ್ಯಕೀಯ ಆರೈಕೆಯನ್ನು ಒದಗಿಸಲು ಆಸ್ಪತ್ರೆಯಲ್ಲಿ ಮಕ್ಕಳ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಆದರೆ, ಈ ಉದ್ದೇಶ ವಿಫಲಗೊಂಡಂತಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಅವರನ್ನೊಳಗೊಂಡ ತಪಾಸಣಾ ತಂಡವು ಆಸ್ಪತ್ರೆಯ ಮಕ್ಕಳ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಈ ವೇಳೆ ಆರೈಕೆ ಕೇಂದ್ರದ ಅಡುಗೆಮನೆ ಸಂಪೂರ್ಣ ಬಳಕೆಯಾಗದಿರುವುದು ಕಂಡು ಬಂದಿತು. ವಾರ್ಡ್ನಲ್ಲಿ ಯಾವುದೇ ಚಟುವಟಿಕೆಗಳು ಕಂಡು ಬಂದಿಲ್ಲ, OPD ಯ ಇಬ್ಬರು ರೋಗಿಗಳನ್ನು ಅಲ್ಲಿ ವಿಶ್ರಾಂತಿ ಪಡೆಯುವಂತೆ ಮಾಡಲಾಗಿರುವುದು ಕಂಡು ಬಂದಿದೆ.