ರಾಹುಲ್ ನೇತೃತ್ವದಲ್ಲಿ ನಶಿಸುತ್ತಿದೆ ಕಾಂಗ್ರೆಸ್ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ.

ಹುಬ್ಬಳ್ಳಿ:: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದಿಸಿರುವುದನ್ನು ನೋಡಿದರೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶದಲ್ಲಿ ಕಾಂಗ್ರೆಸ್ ನಶಿಸಿಹೋಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರಬಲವಾದ ವಿರೋಧ ಪಕ್ಷವಿಬೇಕು. ಆದರೆ, ಪ್ರತಿಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳಲು ಆಗದ ಕಾಂಗ್ರೆಸ್ ತನ್ನ ದಯನೀಯ ಸ್ಥಿತಿಯ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು, ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದು ಕಾಂಗ್ರೆಸ್ನ ಈ ಸೋಲಿಗೆ ಪ್ರಮುಖ ಕಾರಣವಾಗಿದೆ. ಅವರನ್ನೇ ಮುಗಿಸುವವರೊಂದಿಗೆ ಕೈಜೋಡಿಸುತ್ತಿದ್ದಾರೆ. ಮೊದಲು ತಮ್ಮನ್ನು ಮುಗಿಸುವವರ ವಿರುದ್ಧ ಹೋರಾಡುವುದನ್ನು ಕಲಿಯಬೇಕಿದೆ ಎಂದು ಸಲಹೆ ನೀಡಿದರು.