ಕರ್ನಲ್ ಸೋಫಿಯಾ ಖುರೇಷಿಯ ವಿರುದ್ಧ ವಿವಾದಿತ ಹೇಳಿಕೆ – ವಿಜಯ್ ಶಾ ವಿರುದ್ಧ ಕಾನೂನು ಕ್ರಮ

ಭೋಪಾಲ್: ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದಿದ್ದ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಜಬ್ಬಲ್ಪುರ ಹೈಕೋರ್ಟ್ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದೆ.
ತನ್ನ ಹೇಳಿಕೆ ವಿವಾದ ಆಗುತ್ತಿದ್ದಂತೆ ವಿಜಯ್ ಶಾ ಒಂದು ಬಾರಿಯಲ್ಲ 10 ಬಾರಿ ಕ್ಷಮೆ ಕೇಳಲು ಸಿದ್ಧ. ನನ್ನ ಹೇಳಿಕೆಯ ಪೈಕಿ ಕೆಲ ಸಾಲನ್ನು ಹಿಡಿದುಕೊಂಡು ತಿರುಚಿ ವಿವಾದ ಸೃಷ್ಟಿಸಿದ್ದಾರೆ ಎಂದು ದೂರಿದ್ದಾರೆ. ವಿಜಯ್ ಶಾ ಹೇಳಿಕೆಯನ್ನು ರಾಷ್ಟ್ರೀಯ ಮಹಿಳಾ ಆಯೋಗವೂ ಖಂಡಿಸಿದೆ.
ವಿಜಯ್ ಶಾ ಹೇಳಿದ್ದೇನು?
ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಪಾಕಿಸ್ತಾನ ವಿರುದ್ಧ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಿಕ್ಕಿದ ಯಶಸ್ಸನ್ನು ಹೇಳಿ ಮೋದಿ ಸರ್ಕಾರವನ್ನು ಶ್ಲಾಘಿಸುತ್ತಿದ್ದರು.
ಭಾಷಣದಲ್ಲಿ, ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು.
ಭಾಷಣದಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರರನ್ನು ಸದೆ ಬಡಿಯಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಸ್ಪಷ್ಟವಾಗಿ ಹೇಳದೇ ಇದ್ದರೂ ಅವರನ್ನು ಉಲ್ಲೇಖಿಸಿಯೇ ಭಾಷಣ ಮಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.