ಆ ಭಗವಂತ ಬಂದರೂ ಬೆಂಗಳೂರು ದುರಸ್ತಿ 2-3 ವರ್ಷದಲ್ಲಿ ಸಾಧ್ಯವಿಲ್ಲ – ಡಿ.ಕೆ. ಶಿವಕುಮಾರ್

ಬೆಂಗಳೂರು : ಆ ಭಗವಂತ ಬಂದರೂ ಎರಡ್ಮೂರು ವರ್ಷದಲ್ಲಿ ಬೆಂಗಳೂರನ್ನು ಸರಿಪಡಿಸಲು ಸಾಧ್ಯವಿಲ್ಲ. ಭವಿಷ್ಯದ ಬೆಂಗಳೂರಿಗಾಗಿ ಈಗಿನಿಂದಲೇ ಉತ್ತಮ ಯೋಜನೆ ರೂಪಿಸಿದರೆ ಮಾತ್ರ ಸರಿಪಡಿಸಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಡಾ। ರಾಜಕುಮಾರ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ಮೂರು ದಿನಗಳ ನಮ್ಮ ರಸ್ತೆ ಕಾರ್ಯಾಗಾರಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯ ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೆ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ ಎಂದರು.
ನಗರದಲ್ಲಿ ಏಕ ರೂಪ ವ್ಯವಸ್ಥೆ ಇರಬೇಕು ಎಂಬ ಕಾರಣಕ್ಕೆ ರಸ್ತೆ ಕೈಪಿಡಿ ರಚನೆಗೆ ಸೂಚಿಸಲಾಗಿತ್ತು. ಅದರಂತೆ ಇದೀಗ ರೂಪಿಸಲಾಗಿದ್ದು, ಈ ಕೈಪಿಡಿ ರಸ್ತೆ ಬದಿ ಸಸಿಗಳನ್ನು ಎಲ್ಲಿ ನೆಡಬೇಕು, ಕಂಬಗಳು ಎಲ್ಲಿರಬೇಕು, ಮುಖ್ಯರಸ್ತೆ ಹೇಗಿರಬೇಕು, ವಾರ್ಡ್ ರಸ್ತೆಗಳು ಹೇಗಿರಬೇಕು, ಪಾದಚಾರಿ ಮಾರ್ಗಗಳನ್ನು ಹೇಗೆ ನಿರ್ಮಾಣ ಮಾಡಬೇಕು. ಬಸ್ ನಿಲ್ದಾಣಗಳ ವಿನ್ಯಾಸ, ಮೆಟ್ರೋ ಪಿಲ್ಲರ್ಗಳು, ವೃತ್ತಗಳ ಸೌಂದರ್ಯೀಕರಣದ ಬಗ್ಗೆ ಹೊಸ ಆಲೋಚನೆಗಳನ್ನು ಇಲ್ಲಿ ನೋಡಬಹುದು ಎಂದು ತಿಳಿಸಿದರು.
ಎಂಜಿನಿಯರ್ಗಳು, ರಾಜಕಾರಣಿಗಳು, ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು ಇಂದು ಅಧಿಕಾರದಲ್ಲಿ ಇರುತ್ತಾರೆ, ನಾಳೆ ಹೋಗುತ್ತಾರೆ. ಅಧಿಕಾರ ಸಿಕ್ಕಾಗ ಅವರದೇ ರೀತಿಯಲ್ಲಿ ಕೆಲಸ ಮಾಡುತ್ತಾರೆ. ಯಾರೂ ಇಲ್ಲದೇ ಇದ್ದರೂ ‘ನಮ್ಮ ರಸ್ತೆʼ ಎನ್ನುವ ಕೈಪಿಡಿ ಕೆಲಸ ಮಾಡಲು ಮಾರ್ಗದರ್ಶನ ನೀಡುತ್ತದೆ. ಕೈಪಿಡಿಯಲ್ಲಿ ಇರುವ ನಿಯಮಗಳ ಅನುಸಾರವೇ ಕೆಲಸ ಮಾಡಬೇಕು ಎಂದು ಸೂಚಿಸಿದರು.