ಆಪರೇಷನ್ ಸಿಂಧೂರ ಪ್ರತೀಕಾರ ಭೀತಿ: ಹಲವು ರಾಜ್ಯಗಳಲ್ಲಿ ಶಾಲೆ-ಕಾಲೇಜುಗಳಿಗೆ ದಿಢೀರ್ ರಜೆ ಘೋಷಣೆ

ಪಂಜಾಬ್ :ಭಾರತವು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ರಾತ್ರೋರಾತ್ರಿ ಆಪರೇಷನ್ ಸಿಂಧೂರ ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕೆ ಪ್ರತ್ಯುತ್ತರ ನೀಡುತ್ತೇವೆ ಎಂದು ಪಾಕಿಸ್ತಾನ ಕೂಡ ಹೇಳಿರುವ ಹಿನ್ನೆಲೆ ಬುಧವಾರದಂದು ಶಾಲಾ ಕಾಲೇಜುಗಳಿಗೆ ದಿಢೀರ್ ರಜೆ ಘೋಷಿಸಲಾಗಿದೆ. ಪಾಕಿಸ್ತಾನ ಮತ್ತು ಭಾರತ ನಡುವಿನ ಉದ್ವಿಗ್ನ ಸ್ಥಿತಿಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹಲವು ರಾಜ್ಯಗಳಲ್ಲಿ ಬುಧವಾರ ಸಾರ್ವಜನಿಕ ರಜಾ ದಿನವನ್ನು ಘೋಷಿಸಿದೆ.

ಪಾಕಿಸ್ತಾನ ಮತ್ತು ಭಾರತ ನಡುವಿನ ಇತ್ತೀಚಿನ ಭದ್ರತಾ ಉಲ್ಬಣದ ಮಧ್ಯೆ, ಪಂಜಾಬ್ ಸರ್ಕಾರವು ಇಂದು ಸಾರ್ವಜನಿಕ ರಜೆ ಘೋಷಿಸಿದೆ. ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಶಾಲೆಗಳಿಗೂ ಕೂಡ ಇಂದು ರಜೆ ಘೋಷಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪರ್ಸ ರಾಮ್ ತಿಳಿಸಿದ್ದಾರೆ.
ನೆರೆಯ ಪಾಕಿಸ್ತಾನದ ಗಡಿಯಲ್ಲಿರುವ ಜಮ್ಮುವಿನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಮ್ಮು ಆಡಳಿತವು ಬುಧವಾರ ಐದು ಜಿಲ್ಲೆಗಳ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿ, ನಿಯಂತ್ರಣ ರೇಖೆ ಮತ್ತು ಜಮ್ಮು ಮತ್ತು ಕಾಶ್ಮೀರದ ಎದುರಿನ ಅಂತರರಾಷ್ಟ್ರೀಯ ಗಡಿಯಲ್ಲಿ ಅನಿಯಂತ್ರಿತ ಗುಂಡಿನ ದಾಳಿ ನಡೆಸುತ್ತಿವೆ. ಅಲ್ಲದೆ ಭಾರತವು “ಆಪರೇಷನ್ ಸಿಂಧೂರ್” ಅನ್ನು ಆರಂಭಿಸಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಒಂಬತ್ತು ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ಮಾಡಿದ ಕೆಲವೇ ಗಂಟೆಗಳ ನಂತರ ಕದನ ವಿರಾಮ ಉಲ್ಲಂಘನೆ ಮಾಡಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದ್ದು, ರಜೆ ಘೋಷಿಸಲಾಗಿದೆ ಎಂದು ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ.
ಅರೆಸೈನಿಕ ಸಿಬ್ಬಂದಿಗೆ ರಜೆ ರದ್ದು
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಎಲ್ಜಿ ಮತ್ತು ಬಿಎಸ್ಎಫ್ ಮಹಾನಿರ್ದೇಶಕರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಲ್ಲ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿಕೊಳ್ಳುವಂತೆ ಬಿಎಸ್ಎಫ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಎಲ್ಲ ಅರೆಸೈನಿಕ ಪಡೆಗಳ ಮುಖ್ಯಸ್ಥರಿಗೆ ರಜೆಯಲ್ಲಿರುವ ತಮ್ಮ ಸಿಬ್ಬಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಆದೇಶಿಸಿದ್ದಾರೆ.
ಬಹಾವಲ್ಪುರದ ಸುಭಾನ್ ಮಸೀದಿಯ ಮೇಲೆ ಭಾರತ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿದೆ ಎಂದು ಆಸ್ಪತ್ರೆಯ ವೈದ್ಯ ಜೊಹೈಬ್ ಅಹ್ಮದ್ ಹೇಳಿದ್ದಾರೆ. ದೇಶಾದ್ಯಂತ ಭಾರತೀಯ ದಾಳಿಯಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿದೆ. ಕಳೆದ ತಿಂಗಳು ಕಾಶ್ಮೀರದಲ್ಲಿ ನಡೆದ ಪ್ರವಾಸಿಗರ ಹತ್ಯಾಕಾಂಡಕ್ಕೆ ಸಂಬಂಧಿಸಿದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿರುವುದಾಗಿ ಭಾರತ ಹೇಳಿದೆ.