ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ನೀಡಿತು ಶಾಕ್: ದೋಷಾರೋಪ ಪ್ರಕ್ರಿಯೆಗೆ ತಡೆಗೆ ನಿರಾಕರಣೆ

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೋಷಾರೋಪ ನಿಗದಿಪಡಿಸಿ, ವಿಚಾರಣೆಗೆ ಮುಂದಾಗಿರುವ ಸೆಷನ್ಸ್ ನ್ಯಾಯಾಲಯದ ಪ್ರಕ್ರಿಯೆ ಮುಂದೂಡಲು ನಿರ್ದೇಶಿಸುವಂತೆ ಕೋರಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಪ್ರಕರಣದಲ್ಲಿ ಯಾವುದೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿಲ್ಲ. ಇದೊಂದು ರಾಜಕೀಯ ಪ್ರೇರಿತವಾಗಿ ದಾಖಲಿಸಿಕೊಂಡಿರುವ ದೂರಾಗಿದೆ. ಜೊತೆಗೆ, ಎಸ್ಐಟಿಗೆ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರ ವ್ಯಾಪ್ತಿ ಇಲ್ಲ. ಹಾಗಾಗಿ, ಈ ಪ್ರಕರಣ ರದ್ದುಗೊಳಿಸಬೇಕು” ಎಂದು ಮನವಿ ಮಾಡಿದರು.
ಇದಕ್ಕೆ ಆಕ್ಷೇಪಿಸಿದ ಸರ್ಕಾರದ ಪರ ವಕೀಲರು, ”ಆರೋಪಿಯು ಮನೆಗೆಲಸದ ಮಧ್ಯವಯಸ್ಸಿನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಕ್ಕೆ ಸಾಕ್ಷ್ಯ ಇದೆ. ಆರೋಪಿ ತನ್ನದೇ ಮೊಬೈಲ್ನಲ್ಲಿ ಈ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಅದರಲ್ಲಿಯ ಧ್ವನಿ ಮತ್ತು ಡಿಎನ್ಎ ಪರೀಕ್ಷೆಗಳೂ ಇದನ್ನು ದೃಢಪಡಿಸಿವೆ. ತನಿಖಾಧಿಕಾರಿಗಳು ಅತ್ಯಂತ ವೃತ್ತಿಪರತೆಯಿಂದ ನಡೆದುಕೊಂಡಿದ್ದಾರೆ. ಆದ್ದರಿಂದ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸದೆಯೇ ಅರ್ಜಿ ವಜಾಗೊಳಿಸಬೇಕು” ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ”ಈ ಅರ್ಜಿ ವಿಚಾರಣೆ ಮುಕ್ತಾಯವಾಗುವ ತನಕ ವಿಚಾರಣಾ ನ್ಯಾಯಾಲಯದ ಮುಂದಿನ ನ್ಯಾಯಿಕ ಪ್ರಕ್ರಿಯೆಯನ್ನು ಮುಂದೂಡುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು” ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಆದರೆ, ಇದಕ್ಕೆ ಒಪ್ಪದ ನ್ಯಾಯಪೀಠ, ”ಈ ಹಂತದಲ್ಲಿ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ಮುಂದೂಡಲು ಆಗುವುದಿಲ್ಲ” ಎಂಬ ಮೌಖಿಕವಾಗಿ ತಿಳಿಸಿ, ವಿಚಾರಣೆ ಮೂಂದೂಡಿತು.