ಪತ್ನಿ ಕೊಲೆಯಾಗಿದ್ದಾಳೆಂದು ಜೈಲಿಗೆ ಹೋದ ಪತಿ –ಪ್ರೇಮಿಯ ಜೊತೆ ಪತ್ತೆಯಾದ ಪತ್ನಿ

ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, ಸೋಮವಾರ ಸಂಜೆ ಆತನಿಗೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದಅದೇ ಹೆಂಡತಿ ಹೋಟೆಲ್ನಲ್ಲಿ ಕುಳಿತುಕೊಂಡು ತಿಂಡಿ ತಿನ್ನುತ್ತಿರುವುದು ಕಾಣಿಸಿದೆ! ಅದೂ ಕೂಡ ಲವರ್ ಜೊತೆ! ಇದೇನು ಸಿನಿಮಾ ಕಥೆ ಅಂದುಕೊಂಡಿರಾ? ಖಂಡಿತಾ ಅಲ್ಲ. ಕೊಡಗಿನ ಕುಶಾಲನಗರದ ಮಲ್ಲಿಗೆ ಎಂಬವಳ ಸಿನಿಮೀಯ ಕಥೆ ಇಲ್ಲಿದೆ. ಮಡಿಕೇರಿ, ಏಪ್ರಿಲ್ 3: ಕೊಡಗು ಜಿಲ್ಲೆ (Kodagu) ಕುಶಾಲನಗರ (Kushalanagar) ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಕೊಲೆ ಪ್ರಕರಣವೊಂದಕ್ಕೆ (Murder Case) ಇದೀಗ ಭಾರಿ ಟ್ವಿಸ್ಟ್ ದೊರೆತಿದೆ. ಅಷ್ಟೇ ಅಲ್ಲ, ಯಾವ ಸಸ್ಪೆನ್ಸ್, ಹಾರರ್, ಥ್ರಿಲ್ಲರ್, ರೊಮ್ಯಾಂಟಿಕ್ ಸಿನಿಮಾಗೂ ಕಡಿಮೆ ಇಲ್ಲದ ರೀತಿಯಲ್ಲಿ ಇದೀಗ ಅನಾವರಣಗೊಂಡಿದೆ. ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿದ್ದಾಕ್ಕಾಗಿ ಗಂಡ ಸುರೇಶ್ ಎರಡು ವರ್ಷ ಜೈಲೂಟ ಕೂಡ ಮಾಡಿ ಬಂದಿದ್ದಾರೆ. ಆದರೆ, ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್ಗೆ ಕಾಣಿಸಿದೆ. ಅದೂ ಕೂಡ ಆಕೆಯ ಲವರ್ ಜತೆ! ಇದನ್ನು ಗಂಡ ಸುರೇಶ್ನ ಸ್ನೇಹಿತರು ನೋಡಿ, ತಕ್ಷಣವೇ ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಡಿಕೇರಿ ನಗರ ಪೊಲಿಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲೇ ನೋಡಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದ್ದು. ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಲ್ಲಿಗೆ
ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಗ್ರಾಮದ ಆದಿವಾಸಿ ಜನಾಂಗದ ಯುವಕ ಸುಮಾರು 18 ವರ್ಷಗಳ ಹಿಂದೆ ಮಲ್ಲಿಗೆ ಎಂಬಾಕೆಯನ್ನು ವಿವಾಹವಾಗಿರುತ್ತಾರೆ. ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, 2020 ರ ನವೆಂಬರ್ನಲ್ಲಿ ಇದ್ದಕ್ಕಿದ್ದಂತೆ ಒಂದಿನ ಪತ್ನಿ ಮಲ್ಲಿಗೆ ನಾಪತ್ತೆಯಾಗಿದ್ದಾಳೆ. ಹಾಗಾಗಿ ಸುರೇಸ್ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಪೊಲಿಸರು ಒಂದಷ್ಟು ದಿನ ಹುಡುಕಿದರೂ ಮಲ್ಲಿಗೆ ಸಿಕ್ಕಿಲ್ಲ. ಹಾಗಾಗಿ ಎಲ್ಲರೂ ಸುಮ್ಮನಾಗಿದ್ದರು. ಪತ್ನಿ ಗಣೇಶ್ ಎಂಬಾತನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಓಡಿ ಹೋಗಿರುವುದು ಗೊತ್ತಿದ್ದರೂ ಸುರೇಶ್ ಮನನೊಂದು ಸುಮ್ಮನಾಗಿದ್ದರು.
ಸುರೇಶ್ ದುರಾದೃಷ್ಟ: ವಕ್ಕರಿಸಿತು ಕೊಲೆ ಆರೋಪ
ಆದರೆ ಸುರೇಶ್ಗೆ ದುರಾದೃಷ್ಟ ವಕ್ಕರಿಸಿತು. 2021ರ ಜೂನ್ ಮೂರನೇ ವಾರದಲ್ಲಿ ಕುಶಾಲನಗರಕ್ಕೆ ಖಾಸಗಿ ಕಾರಿನಲ್ಲಿ ಒಂದಷ್ಟು ಮಂದಿ ಪೊಲೀಸರು ಬಂದಿದ್ದಾರೆ. ಬಂದವರು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲಿಸ್ ಠಾಣೆಯ ಸಿಬ್ಬಂದಿಯಾಗಿರುತ್ತಾರೆ. ಅವರು ಸುರೇಶನನ್ನು ಬರ ಹೇಳಿ, ಮಹಿಳೆಯೊಬ್ಬಳ ಮೃತದೇಹ ಸಿಕ್ಕಿದೆ, ಬಂದು ಗುರುತುಪತ್ತೆ ಮಾಡು ಎಂದು ಬಲವಂತದಿಂದ ಬೆಟ್ಟದಪುರಕ್ಕೆ ಕರೆದುಕೊಂಡು ಹೋಗಿದ್ದಾರೆ.