Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಇರಾನ್‌ನಿಂದ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ: ‘ಆಪರೇಷನ್ ಸಿಂಧೂ’ ಯಶಸ್ವಿ, ಆದರೆ ಜೆ&ಕೆ ಬಸ್‌ಗಳ ಬಗ್ಗೆ ಅಸಮಾಧಾನ

Spread the love

ಹೊಸದಿಲ್ಲಿ: ಇರಾನ್‌ನಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಸಂಘರ್ಷ ಪೀಡಿತ ದೇಶದಿಂದ ತಮ್ಮನ್ನು ಸ್ಥಳಾಂತರಿಸಿದ್ದಕ್ಕಾಗಿ ಭಾರತ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಆದರೆ ಹೊಸದಿಲ್ಲಿಯಿಂದ ಮನೆಗೆ ಮರಳಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಒದಗಿಸಿದ ಬಸ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದ ವಿದ್ಯಾರ್ಥಿಗಳು, ಬಸ್‌ಗಳ ಬಗ್ಗೆ ದೂರು

ಇರಾನ್‌ನಿಂದ ಹೊಸದಿಲ್ಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 110 ವಿದ್ಯಾರ್ಥಿಗಳ ಪೈಕಿ 90 ವಿದ್ಯಾರ್ಥಿಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದವರಾಗಿದ್ದಾರೆ. ಇವರೆಲ್ಲರನ್ನೂ ಮನೆಗೆ ತಲುಪಿಸುವ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಸರ್ಕಾರ ವಿಶೇಷ ಬಸ್‌ ವ್ಯವಸ್ಥೆ ಮಾಡಿದೆ. ಇರಾನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಮತ್ತು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಜಂಟಿ ಪ್ರಯತ್ನ ಆರಂಭಿಸಿದೆ.

ಆದರೆ, “ಈ ಬಸ್‌ಗಳು ತುಂಬ ಹಳೆಯದಾಗಿದ್ದು, ಆಸನ ವ್ಯವಸ್ಥೆ ಸರಿಯಾಗಿಲ್ಲ” ಎಂದು ವಿದ್ಯಾರ್ಥಿಗಳು ಅಸಮಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ದೂರಿನ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಪ್ರತಿಕ್ರಿಯೆ ನೀಡಿದ್ದು, ಡೀಲಕ್ಸ್‌ ಬಸ್‌ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ.

ಈ ಕುರಿತು ತನ್ನ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಕಚೇರಿ, “ವಿದ್ಯಾರ್ಥಿಗಳ ವಿನಂತಿ ಬಗ್ಗೆ ಮಾಹಿತಿ ಬಂದಿದೆ. ಅವರಿಗೆ ಸರಿಯಾದ ಡಿಲಕ್ಸ್ ಬಸ್‌ಗಳನ್ನು ವ್ಯವಸ್ಥೆ ಮಾಡಲು ಜಮ್ಮು ಮತ್ತು ಕಾಶ್ಮೀರದ ರಾಜ್ಯ ರಸ್ತೆ ಸಾರಿಗೆ ನಿಗಮದೊಂದಿಗೆ ಸಮನ್ವಯ ಸಾಧಿಸಲಾಗುವುದು” ಎಂದು ಭರವಸೆ ನೀಡಿದೆ.


ಆಪರೇಷನ್‌ ಸಿಂಧೂ: ಭಾರತದ ರಕ್ಷಣಾ ಕಾರ್ಯಾಚರಣೆ

ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷದಿಂದಾಗಿ, ಇರಾನ್‌ನಲ್ಲಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರಾನ್‌ನಲ್ಲಿ ಸುಮಾರು 30 ಸಾವಿರ ಭಾರತೀಯ ವಿದ್ಯಾರ್ಥಿಗಳು ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ ಬಹುತೇಕರು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದವರಾಗಿದ್ದಾರೆ.

ಈ ಕಾರ್ಯಾಚರಣೆಯ ಮೊದಲ ಭಾಗವಾಗಿ ಉತ್ತರ ಇರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳನ್ನೊಳಗೊಂಡ ಮೊದಲ ಗುಂಪನ್ನು, ವಿಶೇಷ ವಿಮಾನದ ಮೂಲಕ ಹೊಸದಿಲ್ಲಿಗೆ ಸುರಕ್ಷಿತವಾಗಿ ಕರೆತರಲಾಗಿದೆ. ಭಾರತದ “ಆಪರೇಷನ್ ಸಿಂಧೂ” ಕಾರ್ಯಕ್ರಮದಡಿಯಲ್ಲಿ ಇರಾನ್‌ನ ಉರ್ಮಿಯಾ ವೈದ್ಯಕೀಯ ವಿಶ್ವವಿದ್ಯಾಲಯದ 110 ವಿದ್ಯಾರ್ಥಿಗಳ ಗುಂಪು ಇಂದು (ಜೂನ್‌ 19-ಗುರುವಾರ) ಮುಂಜಾನೆ ಹೊಸದಿಲ್ಲಿ ತಲುಪಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದೆ. ಇಸ್ರೇಲ್-ಇರಾನ್‌ ಸಂಘರ್ಷವನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ.


ವಿದ್ಯಾರ್ಥಿಗಳಿಂದ ಪ್ರಶಂಸೆ

ಇನ್ನು “ಆಪರೇಷನ್‌ ಸಿಂಧೂ” ಕಾರ್ಯಾಚರಣೆ ಕೈಗೊಂಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ, ಇರಾನ್‌ನಿಂದ ಸುರಕ್ಷಿತವಾಗಿ ಮರಳಿರುವ ವಿದ್ಯಾರ್ಥಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. “ನಾವು ಇರಾನ್‌ನಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದೇವು. ನಮ್ಮನ್ನು ವಿಶೇಷ ವಿಮಾನದತ್ತ ಕರೆದೊಯ್ಯಲು ಬಂದಿದ್ದ ಬಸ್‌ ಬಳಿಯೇ ಬಾಂಬ್‌ ಸ್ಫೋಟಗೊಂಡಿತ್ತು. ಆದರೆ ಭಾರತ ಸರ್ಕಾರ ನಮ್ಮನ್ನು ಸುರಕ್ಷಿತವಾಗಿ ಮನೆ ತಲುಪಿಸಿದೆ. ಇದಕ್ಕೆ ನಾವು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇವೆ” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *