Karnataka Band: ಮಾರ್ಚ್ 22ರಂದು ‘ಕರ್ನಾಟಕ ಬಂದ್ ಬಂದ್ ಬಂದ್’! ಆ ದಿನ ಬಸ್ ಓಡಾಡಲ್ಲ, ಹೋಟೆಲ್ ಓಪನ್ ಇರಲ್ಲ.

ಕನ್ನಡ ಮಾತನಾಡಿದ್ದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕನ್ನಡ ಪರ ಹೋರಾಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲಾ ಆಕ್ರೋಶ ವ್ಯಕ್ತವಾಗುತ್ತಿದ್ದರು ಮರಾಠಿ ಪುಂಡರ ದರ್ಪ ಮಾತ್ರ ಕಡಿಮೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಮಾರ್ಚ್ 22ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ.
ಕನ್ನಡಿಗರ ಮೇಲಿನ ದೌರ್ಜನ್ಯದ ವಿರುದ್ಧ ಆಕ್ರೋಶ.
ಬೆಂಗಳೂರಿನಲ್ಲಿ ಪ್ರರಿಕ್ರಿಯೆ ನೀಡಿದ ವಾಟಾಳ್ ನಾಗರಾಜ್ ಅವರು, ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕನ್ನಡಿಗರೇ ಸುರಕ್ಷಿತವಾಗಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳಗಾವಿಯಂತೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪುಂಡರ ಕೈವಾಡಕ್ಕೆ ಸಿಲುಕಿದೆ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯದ ಎಲ್ಲಾ ಪಕ್ಷಗಳೂ ಕೇವಲ ಕನ್ನಡಿಗರ ಮತಗಳನ್ನು ಬಳಸಿಕೊಳ್ಳುತ್ತವೆಯೇ ಹೊರತು, ಅವರ ಮೇಲೆ ಅನ್ಯಾಯವಾದಾಗ ಧ್ವನಿ ಎತ್ತುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಎಂಇಎಸ್ ನ ಏಜೆಂಟ್ಗಳಂತೆ ವರ್ತಿಸುತ್ತಿವೆ ಎಂದು ಕಿಡಿಕಾರಿದ್ದಾರೆ.