ಕುಂದಾಪುರ: ಬಸ್ನ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ತಂದೆ ಸಾ*ವು, ಮಗ ಗಂಭೀರ!

ಬ್ರಹ್ಮಾವರ: ಬಸ್ನ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಅವರ ಪುತ್ರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಮಾಬುಕಳ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೂಲತಃ ಕಿರಿಮಂಜೇಶ್ವರದವರಾದ, ಪ್ರಸ್ತುತ ಮಟಪಾಡಿಯಲ್ಲಿ ವಾಸಿಸುತ್ತಿರುವ ರವಿರಾಜ್(49) ಮೃತ ದುರ್ದೈವಿ. ಅವರ ಪುತ್ರ ಅನಿಲ್ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ.ಕುಂದಾಪುರದ ಕೋಟದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರ ಪುತ್ರ ಅನಿಲ್ ತರಗತಿಗೆ ತಡವಾಗುತ್ತಿದ್ದ ಹಿನ್ನೆಲೆಯಲ್ಲಿ, ರವಿರಾಜ್ ಸ್ಕೂಟರ್ನಲ್ಲಿ ಅವರನ್ನು ಶಾಲೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಬ್ರಹ್ಮಾವರದಿಂದ ಕುಂದಾಪುರದತ್ತ ತೆರಳುತ್ತಿದ್ದ ಬಸ್ವೊಂದು ಮತ್ತೊಂದು ವಾಹನವನ್ನು ಹಿಂದಿಕ್ಕಿ, ಯಾವುದೇ ಮುನ್ಸೂಚನೆ ನೀಡದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ನಿಂತಿದೆ ಎನ್ನಲಾಗಿದೆ.ಇದರಿಂದ ನಿಯಂತ್ರಣ ಕಳೆದುಕೊಂಡ ರವಿರಾಜ್ ಅವರ ಸ್ಕೂಟರ್ ಬಸ್ನ ಬಲಭಾಗದ ಹಿಂಬದಿಗೆ ಡಿಕ್ಕಿ ಹೊಡೆದು, ಬಸ್ ನ ಅಡಿ ಬಿದ್ದಿದೆ. ಅಪಘಾತದ ತೀವ್ರತೆಗೆ ತಂದೆ-ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಬ್ರಹ್ಮಾವರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ರವಿರಾಜ್ ಅವರು ಆಸ್ಪತ್ರೆಗೆ ಕರೆದೊಯ್ಯುವುದರೊಳಗೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅನಿಲ್ ಅವರು ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಸ್ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಆರೋಪಿಸಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಚಾಲಕನನ್ನು ತರಾಟೆಗೆ ತೆಗೆದುಕೊಂಡರು. ಮೃತ ರವಿರಾಜ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.