ಸದನದಲ್ಲಿ ಎಣ್ಣೆ ಸದ್ದು! ಅಕ್ರಮ ಮದ್ಯ ಮಾರಾಟದ ಕುರಿತು ಕೈ ಶಾಸಕರ ವಾಗ್ದಾಳಿ

ವಿಧಾನಸಭೆ: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಈ ವಿಚಾರ ಇಂದು ಸದನದಲ್ಲಿ ಪ್ರತಿಧ್ವನಿಸಿತು. ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ಅವರು ಅನಧೀಕೃತ ಮದ್ಯ ಮಾರಾಟವಾಗುತ್ತಿದೆ ಎಂದು ಪ್ರಸ್ತಾಪ ಮಾಡಿದರು.

ಅಕ್ರಮ ಮದ್ಯ ಮಾರಾಟವಾಗುತ್ತಿದೆ, ಇದರಿಂದ ವಿದ್ಯಾರ್ಥಿಗಳು ಮದ್ಯ ವ್ಯಸನಿಗಳಾಗುತ್ತಿದ್ದಾರೆ. ಕ್ಷೇತ್ರಕ್ಕೆ ಹೋದಾಗ ತಾಯಂದಿರು ಕೈ ಮುಗಿದು ಮನವಿ ಮಾಡ್ತಿದ್ದಾರೆ. ರಸ್ತೆಯ ಅಪಘಾತಕ್ಕೂ ಅಕ್ರಮ ಮದ್ಯ ಮಾರಾಟವೇ ಕಾರಣವಾಗಿದೆ. ಇದು ನನ್ನ ಕ್ಷೇತ್ರದಲ್ಲಿ ಒಂದೇ ಅಲ್ಲ ಇಡೀ ರಾಜ್ಯದಲ್ಲಿ ನಡೆಯುತ್ತಿದೆ. ಇದಕ್ಕೆ ಸರ್ಕಾರ ಏನು ಕ್ರಮ ತಗೊಂಡಿದೆ ಎಂದು ಪ್ರಶ್ನೆ ಮಾಡಿದರು.
ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ಈ ಪ್ರಶ್ನೆಗೆ ಉತ್ತರಿಸಿದ್ದು, ಕಂಟ್ರೋಲ್ ಮಾಡಲು ಗ್ರಾಮ ಸಭೆಗಳನ್ನು ಮಾಡ್ತಿದ್ದೇವೆ. ಇದರ ತಡೆಗೆ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ. ಡಿಸಿ, ಎಸ್ಪಿಗಳ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಅಕ್ರಮ ಮದ್ಯ ಮಾರಾಟ ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.