ಮಂಗಳೂರು ವಿವಿ 43ನೇ ಘಟಿಕೋತ್ಸವ: ಗೌರವ ಡಾಕ್ಟರೆಟ್ ಪ್ರದಾನ, 54 ಚಿನ್ನದ ಪದಕ ವಿತರಣೆ

ಮಂಗಳೂರು: ಸಮಾಜ ಸೇವಾ ಮತ್ತು ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಉದ್ಯಮಿ ರೋಹನ್ ಮೊಂತೇರೊ ಮತ್ತು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೆಟ್ ಪದವಿಗೆ ಆಯ್ಕೆ ಮಾಡಲಾಗಿದೆ.
ಮಾರ್ಚ್ 29ರಂದು ಬೆಳಗ್ಗೆ 11 ಗಂಟೆಗೆ ಕೊಣಾಜೆಯ ಮಂಗಳ ಸಭಾಂಗಣದಲ್ಲಿ ನಡೆಯಲಿರುವ 43ನೇ ಘಟಿಕೋತ್ಸವದಲ್ಲಿ ಈ ಗೌರವ ಡಾಕ್ಟರೆಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ| ಪಿ.ಎಲ್. ಧರ್ಮ ತಿಳಿಸಿದ್ದಾರೆ. ಈ ಸಮಾರಂಭದಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಉಪಾಧ್ಯಕ್ಷ ಹಾಗೂ ಸೋಮೈಯಾ ವಿದ್ಯಾವಿಹಾರ ವಿವಿ ಕುಲಪತಿ ಪ್ರೊ| ವಿ.ಎನ್. ರಾಜಶೇಖರನ್ ಪಿಳ್ಳೈ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡಲಿದ್ದು, ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪದವಿ ಫಲಿತಾಂಶ: ಶೇ. 73.75 ವಿದ್ಯಾರ್ಥಿಗಳು ಉತ್ತೀರ್ಣ
ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಒಟ್ಟು 25,387 ವಿದ್ಯಾರ್ಥಿಗಳು ಹಾಜರಾಗಿದ್ದು, 18,723 (ಶೇ. 73.75) ಮಂದಿ ಉತ್ತೀರ್ಣರಾಗಿದ್ದಾರೆ. ಸ್ನಾತಕೋತ್ತರ ಪರೀಕ್ಷೆಗಳಿಗೆ 3,331 ವಿದ್ಯಾರ್ಥಿಗಳು ಹಾಜರಾಗಿದ್ದು, 3,152 (ಶೇ. 94.63) ಮಂದಿ ಪಾಸ್ ಆಗಿದ್ದಾರೆ. ಈ ಬಾರಿ 54 ಚಿನ್ನದ ಪದಕ ಹಾಗೂ 56 ನಗದು ಬಹುಮಾನಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
64 ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಪದವಿ
ಈ ವರ್ಷ 64 ಸಂಶೋಧನಾ ವಿದ್ಯಾರ್ಥಿಗಳು ಪಿಎಚ್.ಡಿ. ಪದವಿ ಪಡೆಯಲಿದ್ದು, ಇದರಲ್ಲಿ 31 ಪುರುಷರು, 33 ಮಹಿಳೆಯರು ಹಾಗೂ 3 ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಸೇರಿದ್ದಾರೆ.
ಗೌರವ ಡಾಕ್ಟರೆಟ್ ಸ್ವೀಕರಿಸುವವರು:
ಡಾ| ಎಂ.ಎನ್. ರಾಜೇಂದ್ರ ಕುಮಾರ್
ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿ 1987ರಲ್ಲಿ ನಿರ್ದೇಶಕರಾಗಿ ಸೇವೆ ಆರಂಭಿಸಿ, 1994ರಿಂದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ನೂತನ ಮಾರ್ಗಗಳನ್ನು ಅನುಸರಿಸಿ ಗ್ರಾಮೀಣ ವಲಯದ ಅಭಿವೃದ್ಧಿಗೆ ಪ್ರಭಾವ ಬೀರುತ್ತಿದ್ದಾರೆ. ಮೊಬೈಲ್ ಬ್ಯಾಂಕಿಂಗ್ ಪರಿಚಯಿಸಿ, ಜನಸಾಮಾನ್ಯರಿಗೆ ಸಹಕಾರಿ ಬ್ಯಾಂಕಿಂಗ್ ಸೇವೆಗಳನ್ನು ಸುಲಭಗೊಳಿಸುವತ್ತ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ಕನ್ಯಾನ ಸದಾಶಿವ ಶೆಟ್ಟಿ
ಮುಂಬಯಿಯ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಸ್ಥಾಪಕನಾಗಿರುವ ಅವರು ಉದ್ಯೋಗ ಸೃಷ್ಟಿಯ ಜೊತೆಗೆ ಹಲವಾರು ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಅನೇಕ ಧಾರ್ಮಿಕ-ಸಾಂಸ್ಕೃತಿಕ ಸಂಘಟನೆಗಳಿಗೆ ಆರ್ಥಿಕ ಬೆಂಬಲ ಒದಗಿಸಿದ್ದಾರೆ.
ರೋಹನ್ ಮೊಂತೇರೊ
ಮಂಗಳೂರು ನಗರದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮುಂಚೂಣಿಯ ಉದ್ಯಮಿಯಾಗಿರುವ ಅವರು, ಕಳೆದ 32 ವರ್ಷಗಳಲ್ಲಿ 40ಕ್ಕೂ ಅಧಿಕ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಶಿಕ್ಷಣ, ಆರೋಗ್ಯ, ಪುನರ್ವಸತಿ, ಸಂಸ್ಕೃತಿಯ ಉತ್ತೇಜನ ಸೇರಿದಂತೆ ಹಲವಾರು ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ತಮ್ಮ ಕೊಡುಗೆ ನೀಡುತ್ತಿದ್ದಾರೆ.
ಈ ಗೌರವ ಪದವಿಗಳ ಪ್ರಧಾನವು ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದ ಸಾಧಕರಿಗೆ ನೀಡುವ ಮಾನ್ಯತೆಯ ಸಂಕೇತವಾಗಿದೆ.