ಮಣಿಪುರದಲ್ಲಿ ಉಗ್ರರ ರಾಕೆಟ್ ದಾಳಿಗೆ ಇಬ್ಬರು ಮಕ್ಕಳು ಬಲಿ: 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಕಟ್, ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿ

ಇಂಫಾಲ್: ಮಣಿಪುರದಲ್ಲಿ ನಡೆದ ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಸಾವನಪ್ಪಿದ ಬೆನ್ನಲ್ಲೇ ಇದೀಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರವು ಐದು ಜಿಲ್ಲೆಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದ್ದು, ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಿದೆ.

ಏಪ್ರಿಲ್ 7ರ ಮಧ್ಯರಾತ್ರಿ ಸುಮಾರು 1:00 ಗಂಟೆಯ ಸುಮಾರಿಗೆ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೊಂಗ್ಲಾಬಿ ಗ್ರಾಮದ ಮೇಲೆ ಉಗ್ರಗಾಮಿಗಳು ಅತ್ಯಾಧುನಿಕ ರಾಕೆಟ್ಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯೊಂದರ ಕಿಟಕಿಯ ಮೂಲಕ ನುಗ್ಗಿದ ರಾಕೆಟ್ ಸ್ಫೋಟಗೊಂಡ ಪರಿಣಾಮ, ನಿದ್ದೆಯಲ್ಲಿದ್ದ 5 ವರ್ಷದ ಬಾಲಕ ಮತ್ತು 6 ತಿಂಗಳ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಮಕ್ಕಳ ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಇಂಫಾಲ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಮಕ್ಕಳು ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯೊಬ್ಬರ ಮಕ್ಕಳೆಂದು ಗುರುತಿಸಲಾಗಿದೆ.
ಘಟನೆಯ ಬೆನ್ನಲ್ಲೇ ಉಂಟಾದ ಉದ್ವಿಗ್ನತೆಯನ್ನು ಹತೋಟಿಗೆ ತರಲು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿಗಳು ಹರಡುವುದನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಕಾಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನ 2:00 ಗಂಟೆಯಿಂದ ಜಾರಿಗೆ ಬರುವಂತೆ ಅನಿರ್ದಿಷ್ಟಾವಧಿಯವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇಂಫಾಲ್ನ ಪ್ರಮುಖ ರಸ್ತೆಗಳಲ್ಲಿ ಭದ್ರತಾ ಪಡೆಗಳು ಪಥಸಂಚಲನ ನಡೆಸುತ್ತಿದ್ದು, ಬಿಗಿ ಕರ್ಫ್ಯೂ ಜಾರಿಯಲ್ಲಿದೆ.
ಮಕ್ಕಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಬಿಷ್ಣುಪುರ ಮತ್ತು ಇಂಫಾಲ್ನ ಹಲವೆಡೆ ಪ್ರತಿಭಟನಾಕಾರರು ತೈಲ ಟ್ಯಾಂಕರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಮತ್ತು ಗಾಳಿಯಲ್ಲಿ ಗುಂಡು ಹಾರಿಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.
ಈ ದಾಳಿಯನ್ನು ಮಣಿಪುರ ಮುಖ್ಯಮಂತ್ರಿಗಳು “ಅನಾಗರಿಕ ಕೃತ್ಯ” ಎಂದು ಬಣ್ಣಿಸಿದ್ದಾರೆ. ನಾಗರಿಕ ವಸತಿ ಪ್ರದೇಶಗಳ ಮೇಲೆ ಡ್ರೋನ್ ಮತ್ತು ರಾಕೆಟ್ ದಾಳಿಗಳನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಪ್ರಸ್ತುತ ಮಣಿಪುರದಲ್ಲಿ ಹೆಚ್ಚುವರಿ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದ್ದು, ಗಡಿ ಭಾಗಗಳಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆಗಳ ಮೂಲಕ ತೀವ್ರ ನಿಗಾ ವಹಿಸಲಾಗಿದೆ.