ನೆಲಮಂಗಲ ಆಯಿಲ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ : ₹30 ಕೋಟಿಯ ಹಾನಿ

ನೆಲಮಂಗಲ: ಇಂದು ಬೆಳಂಬೆಳಗ್ಗೆ ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಬೆಳಗ್ಗೆ 3 ಗಂಟೆ ಸುಮಾರಿಗೆ ಶಾಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಎಂದು ಶಂಕಿಸಲಾಗಿದ್ದು, 40,000 ಚದರ ಅಡಿಯ ಗೋದಾಮು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಸರಿಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಯಿಲ್ ಸಂಪೂರ್ಣವಾಗಿ ಭಸ್ಮವಾಗಿದೆ.

ಬೆಂಕಿಯ ಕೆನ್ನಾಲಿಗೆ:
ಧಗಧಗನೆ ಉರಿಯುತ್ತಿರುವ ಬೆಂಕಿಯು ಕ್ಷಣಕ್ಷಣಕ್ಕೂ ಹರಡುತ್ತಿದ್ದು, ಸುತ್ತಮುತ್ತಲಿನ ಗೋದಾಮುಗಳು ಮತ್ತು ಮನೆಗಳಿಗೆ ತಗುಲುವ ಭೀತಿಯನ್ನು ಸೃಷ್ಟಿಸಿದೆ. ನೆಲಮಂಗಲ, ಪೀಣ್ಯ, ಯಶವಂತಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ 20ಕ್ಕೂ ಹೆಚ್ಚು ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಆದರೆ, ನೀರಿನ ಕೊರತೆಯಿಂದಾಗಿ ಬೆಂಕಿಯನ್ನು ನಿಯಂತ್ರಿಸುವುದು ಸವಾಲಾಗಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಘಟನೆಯಿಂದಾಗಿ ಅಕ್ಕಪಕ್ಕದ ಕೈಗಾರಿಕೆಗಳು ಮತ್ತು ನಿವಾಸಿಗಳಲ್ಲಿ ಭಯದ ವಾತಾವರಣ ಮನೆಮಾಡಿದೆ. ‘ಬೆಂಕಿಯ ಜ್ವಾಲೆಗಳು ಆಕಾಶಕ್ಕೇರಿವೆ. ಇಡೀ ಪ್ರದೇಶದಲ್ಲಿ ಕಪ್ಪಾದ ಹೊಗೆ ಆವರಿಸಿದೆ’ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಅಗ್ನಿಶಾಮಕ ತಂಡಗಳು ತೀವ್ರವಾಗಿ ಶ್ರಮಿಸುತ್ತಿದ್ದರೂ, ಬೆಂಕಿಯ ತೀವ್ರತೆಯನ್ನು ನಿಯಂತ್ರಿಸಲು ಹೆಚ್ಚಿನ ಸಂಪನ್ಮೂಲಗಳ ಅಗತ್ಯವಿದೆ. ಸ್ಥಳೀಯ ಆಡಳಿತವು ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಹೆಚ್ಚಿನ ನೀರಿನ ವ್ಯವಸ್ಥೆ ಮತ್ತು ಸಹಾಯಕ ತಂಡಗಳನ್ನು ಕರೆಸಲಾಗಿದೆ.
ಬೆಂಕಿ ನಿಯಂತ್ರಣಕ್ಕೆ ತೀವ್ರ ಪ್ರಯತ್ನಗಳು ನಡೆಯುತ್ತಿವೆ. ಪ್ರಾಣಹಾನಿ ಸಂಭವಿಸಿಲ್ಲ. ಇದುವರೆಗೆ ಬಂದಿಲ್ಲ, ಆದರೆ ಆಸ್ತಿಪಾಸ್ತಿಯ ಹಾನಿಯು ಭಾರೀ ಪ್ರಮಾಣದಲ್ಲಿದೆ.