ಭಿಕ್ಷಾಟನೆ ದಂಧೆಕೋರರಿಗೆ ಸಚಿವ ಮಹದೇವಪ್ಪ ಖಡಕ್ ವಾರ್ನಿಂಗ್: ಕಾನೂನು ಕ್ರಮಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ಭಿಕ್ಷಾಟನೆ ದಂಧೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಶುಕ್ರವಾರ ವಿಧಾನಪರಿಷತ್ತಿನ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ.ಕೆ.ಗೋವಿಂದರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಿಕ್ಷಾಟನೆ ನಿರ್ಬಂಧ ಮಾಡಲು ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಕೇಂದ್ರ ಪರಿಹಾರ ಸಮಿತಿಯ ಅಧೀನದಲ್ಲಿ ಒಟ್ಟು 15 ನಿರಾಶ್ರಿತರ ಪರಿಹಾರ ಕೇಂದ್ರಗಳಿದ್ದು, ಬೆಂಗಳೂರು, ಬೆಂಗಳೂರು ಪೂರ್ವ, ಬೆಳಗಾವಿ, ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಧಾರವಾಡ, ದಕ್ಷಿಣ ಕನ್ನಡ, ಕಲಬುರಗಿ, ಕೋಲಾರ, ಮೈಸೂರು, ರಾಯಚೂರು, ಶಿವಮೊಗ್ಗ ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಚ್.ಸಿ.ಮಹದೇವಪ್ಪ ವಿವರಿಸಿದರು.

ಹಿಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಭಿಕ್ಷುಕರ ಪುನರ್ವಸತಿಗಾಗಿ 365.17 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ನಿರಾಶ್ರಿತರ ಒಳಿತಿಗಾಗಿ ಮಾನಸಿಕ ಆರೋಗ್ಯ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ತರಬೇತಿ ಕೇಂದ್ರ ಮತ್ತು ಸಿದ್ದ ಉಡುಪು ಘಟಕವನ್ನು ಸ್ಥಾಪಿಸಲು ಕೇಂದ್ರ ಪರಿಹಾರ ಸಮಿತಿಗೆ ಸೂಚಿಸಲಾಗಿದೆ ಎಂದು ಎಚ್.ಸಿ.ಮಹದೇವಪ್ಪ ಹೇಳಿದರು.
ಭಿಕ್ಷುಕರು ಸ್ವಾಭಿಮಾನದ ಬದುಕು ನಡೆಸಲು ಹಾಗೂ ಸಾಮಾಜಿಕ ಭದ್ರತೆಗಾಗಿ ಆಧಾರ್ ಕಾರ್ಡ್ ಮಾಡಿಸಿ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ ಒದಗಿಸಲು ಸಂಬಂಧಿತ ಇಲಾಖೆಗಳೊಂದಿಗೆ ಮಂಜೂರಾತಿಗೆ ಕ್ರಮವಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಭಿಕ್ಷಾಟನೆ ಮುಕ್ತ ರಾಜ್ಯವನ್ನಾಗಿ ಮಾಡಲು ಕ್ರಮವಹಿಸಲಾಗುವುದು ಎಂದು ಎಚ್.ಸಿ.ಮಹದೇವಪ್ಪ ತಿಳಿಸಿದರು.