ಬೈಲಹೊಂಗಲ: ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಕಬ್ಬಿನ ಟ್ರ್ಯಾಕ್ಟರ್; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಸಾಯಿಮಂದಿರದ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಅದೃಷ್ಟವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಅತಿಯಾದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಫಾಸ್ಟ್ ಫುಡ್ ಅಂಗಡಿಯೊಳಗೆ ನುಗ್ಗಿದೆ.


ಟ್ರ್ಯಾಕ್ಟರ್ ನುಗ್ಗುತ್ತಿದ್ದಂತೆಯೇ ಅಂಗಡಿಯಲ್ಲಿದ್ದ ಗ್ರಾಹಕರು ಮತ್ತು ಸಿಬ್ಬಂದಿ ಕ್ಷಣಾರ್ಧದಲ್ಲಿ ಹೊರಗೆ ಓಡಿಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಬ್ಬಿನ ಭಾರಕ್ಕೆ ಟ್ರ್ಯಾಕ್ಟರ್ ವೇಗವಾಗಿ ನುಗ್ಗಿದ ಪರಿಣಾಮ ಫಾಸ್ಟ್ ಫುಡ್ ಅಂಗಡಿಯಲ್ಲಿದ್ದ ಬೆಲೆಬಾಳುವ ಉಪಕರಣಗಳು, ಪೀಠೋಪಕರಣಗಳು ಹಾಗೂ ಆಹಾರ ಸಾಮಗ್ರಿಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಮಾಲೀಕರಿಗೆ ಗಣನೀಯ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಚಾಲಕನ ಅಜಾಗರೂಕತೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ವಾಹನವನ್ನು ತೆರವುಗೊಳಿಸಲು ಹರಸಾಹಸ ಪಟ್ಟರು. ಜನನಿಬಿಡ ಪ್ರದೇಶದಲ್ಲಿ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
