ನವದೆಹಲಿ/ಜೈಪುರ: ಅತ್ಯಾಚಾರ ಪ್ರಕರಣದ ಅಪರಾಧಿ ಅಸಾರಾಂ ಬಾಪುಗೆ ಆರು ತಿಂಗಳ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ/ಜೈಪುರ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ (Asaram Bapu) ವೈದ್ಯಕೀಯ ಚಿಕಿತ್ಸೆಗಾಗಿ ರಾಜಸ್ಥಾನ ಹೈಕೋರ್ಟ್ (Rajasthan High Court) ಆರು ತಿಂಗಳುಗಳ ಕಾಲ ಮಧ್ಯಂತರ ಜಾಮೀನು (Interim Bail) ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರ ವಿಭಾಗೀಯ ಪೀಠ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸರಾಂ ಅವರ ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ಉಲ್ಲೇಖಿಸಿ ನಿಯಮಿತ ಜಾಮೀನು ಮಂಜೂರು ಮಾಡಿತು.
ಆಗಸ್ಟ್ 2013ರಿಂದ ಅಸಾರಾಂ ಬಾಪು ಜೈಲಿನಲ್ಲಿದ್ದಾರೆ. ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾದರು. ಬಾಲಕಿಯ ಪೋಷಕರು ಅವರ ಭಕ್ತರಾಗಿದ್ದು, ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ಮಾಡಲಾಯ್ತು. ಎರಡು ತಿಂಗಳ ನಂತರ, ಗುಜರಾತ್ನ ಸೂರತ್ ಆಶ್ರಮದಲ್ಲಿ ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರ ಆರೋಪದಲ್ಲಿ ಅಸಾರಾಂ ಮತ್ತು ಅವರ ಮಗ ನಾರಾಯಣ್ ಸಾಯಿ ವಿರುದ್ಧ ಪ್ರಕರಣ ದಾಖಲಾಯಿತು. ಈ ಪ್ರಕರಣಗಳಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ
ಈ ವರ್ಷ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಅಸಾರಾಂಗೆ ವೈದ್ಯಕೀಯ ಆಧಾರದ ಮೇಲೆ ಮಾರ್ಚ್ ಅಂತ್ಯದವರೆಗೆ ಮಧ್ಯಂತರ ಜಾಮೀನು ನೀಡಿತ್ತು. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ನೀಡಿತ್ತು. ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವಾಗ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಅಥವಾ ಅವರ ಅನುಯಾಯಿಗಳನ್ನು ಭೇಟಿ ಮಾಡಲು ಪ್ರಯತ್ನಿಸಬಾರದು ಎಂದು ಆದೇಶಿಸಿತು.
ಅಸಾರಾಂ ಬಾಪು ಹೃದಯ ಸಂಬಂಧಿ ಸಮಸ್ಯೆಗಳು, ಇತರ ವಯೋಸಹಜ ರೋಗಗಳಿಂದ ಬಳಲುತ್ತಿದ್ದಾರೆ. ಜೈಲಿನಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದು ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಆರೈಕೆ ಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಹೈಕೋರ್ಟ್ ಈ ಆಧಾರಗಳನ್ನು ಪರಿಗಣಿಸಿ ಆರು ತಿಂಗಳ ಜಾಮೀನು ನೀಡಿದೆ.