ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಹೊಸ ನಾಮಕರಣ

ಬೆಂಗಳೂರು:ಸರಕಾರಿ ನೇಮಕಾತಿಗಳಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರಕಾರ 2022ರ ಅ.23ರಂದು ಹೊರಡಿಸಿದ್ದ ಆದೇಶದ ಆಧಾರದಲ್ಲಿ 384 ಗೆಜೆಟೆಡ್ ಪ್ರೊಬೇಷನರ್ನ ಹುದ್ದೆಗಳ ನೇಮಕಕ್ಕೆ 2024ರ ಫೆ.26ರಂದು ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ರದ್ದುಪಡಿಸಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಿ.ಎನ್. ಮಧು ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕೆಎಟಿ ಅಧ್ಯಕ್ಷ ನ್ಯಾ| ಆರ್.ಬಿ ಬೂದಿಹಾಳ ಹಾಗೂ ಆಡಳಿತ ಸದಸ್ಯ ರಾಘವೇಂದ್ರ ಔರಾದ್ಕರ್ ಅವರಿದ್ದ ವಿಚಾರಣ ಪೀಠ ಮೇ 28ರಂದು ಈ ಆದೇಶ ಮಾಡಿದೆ. ಇದರಿಂದಾಗಿ ಕೆಎಎಸ್ ಅಧಿಕಾರಿಗಳ ನೇಮಕಾತಿ ಮತ್ತೆ ಅತಂತ್ರಕ್ಕೆ ಸಿಲುಕಿದಂತಾಗಿದೆ.
ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ ಪೀಠ, ಮೀಸಲಾತಿ ಪ್ರಮಾಣ ಹೆಚ್ಚಿಸಿ ಹೊರಡಿಸಿದ್ದ ಆದೇಶ ಹಾಗೂ ಅದನ್ನು ಆಧರಿಸಿ 384 ಹುದ್ದೆಗಳ ಭರ್ತಿಗೆ 2024ರ ಫೆ.26ರಂದು ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿದ್ದ ಅಧಿಸೂಚನೆ ಎರಡನ್ನೂ ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ, ಕಾನೂನು ಪ್ರಕಾರ ಹೊಸದಾಗಿ ಅಧಿಸೂಚನೆ ಹೊರಡಿಸಲು ಕರ್ನಾಟಕ ಲೋಕಸೇವಾ ಆಯೋಗ ಸ್ವತಂತ್ರವಾಗಿದೆ ಎಂದೂ ಕೆಎಟಿ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಮುಖ್ಯ ಪರೀಕ್ಷೆ ನಡೆದು ಇನ್ನೇನು ಫಲಿತಾಂಶ ಹೊರಬೀಳಬೇಕಿದೆ. ಈ ಹಂತದಲ್ಲಿ ಕೆಎಟಿ ಆದೇಶ ಅಭ್ಯರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿಸಿದೆ. ಸರಕಾರದ ಮುಂದಿನ ನಡೆಯ ಮೇಲೆ ಅಭ್ಯರ್ಥಿಗಳ ಭವಿಷ್ಯ ನಿಂತಿದೆ. ಒಂದೊಮ್ಮೆ ಸರಕಾರ ನೇಮಕ ಪ್ರಕ್ರಿಯೆ ಊರ್ಜಿತಗೊಳಿಸಬೇಕಾದರೆ ಕೆಎಟಿ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕಾಗಿದೆ.