NWKRTC ಅಧ್ಯಕ್ಷರ ನೇಮಕ ಗೊಂದಲಕ್ಕೆ ತೆರೆ: ‘ಪ್ರಿಂಟ್ ಮಿಸ್ಟೇಕ್’ನಿಂದ ಎದ್ದ ವಿವಾದ!

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು? ಸದ್ಯ ಈ ಪ್ರಶ್ನೆ ಸ್ವತಃ ಹಾಲಿ ಅಧ್ಯಕ್ಷ ರಾಜು ಕಾಗೆ (Raju Kage) ಅವರನ್ನೇ ಕಾಡತೊಡಗಿದೆ. ಎಐಸಿಸಿ ಕಳಿಸಿರುವ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿಯಾಗಿರೋ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ, ಉಂಟಾಗಿರೋ ಗೊಂದಲದ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ನಿಮ್ಮನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ಕೈಬಿಟ್ಟಿಲ್ಲ ಎಂದು ಸಿಎಂ ತಿಳಿಸಿದ್ದು, ಪ್ರಿಂಟ್ ಮಿಸ್ಟೆಕ್ ಆಗಿದೆ. ಅದನ್ನು ಹೊರತುಪಡಿಸಿ ಯಾವುದೇ ಸಮಸ್ಯೆ ಇಲ್ಲ. ನಿಮ್ಮನ್ನೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಗೊಂದಲ ಉಂಟಾಗಿದ್ದೇಗೆ?
ಸರ್ಕಾರಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡಿದ್ದ ಕಾರಣ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಶಾಸಕ ರಾಜು ಕಾಗೆ ಅವರಿಗೆ ಗೇಟ್ಪಾಸ್ ನೀಡಲಾಗಿದೆ. ತೆರವಾದ ಹುದ್ದೆಗೆ ಅರುಣ್ ಪಾಟೀಲ್ ನೇಮಕಕ್ಕೆ ಹೈಕಮಾಂಡ್ ನಿರ್ಧರಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲರಿಂದ ಈ ಬಗ್ಗೆ ಪಟ್ಟಿ ಸಿಎಂ ಸಿದ್ದರಾಮಯ್ಯ ಅವರಿಗೆ ರವಾನೆಯಾಗಿದೆ. ಈ ಮೂಲಕ ಸರ್ಕಾರಕ್ಕೆ ಮುಜುಗರ ಉಂಟುಮಾಡುವಂಥ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಪ್ರಬಲ ಸಂದೇಶ ರವಾನಿಸಿರುವ ಬಗ್ಗೆ ಸುದ್ದಿ ಹರಿದಾಡಿತ್ತು.
ಇದನ್ನೂ ಓದಿ: ದೇವರ ಕಡೆಯಿಂದ ಹೊಡೆಸುತ್ತೇನೆ: ಚಿತ್ರ ವಿಚಿತ್ರವಾಗಿ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
CWC ಸಭೆಗೆಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಿಹಾರಕ್ಕೆ ತೆರಳಿದ ಸಂದರ್ಭದಲ್ಲಿಯೇ ರಾಜ್ಯದ ಒಟ್ಟು 39 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರ ಪಟ್ಟಿಯನ್ನ AICC ಬಿಡುಗಡೆ ಮಾಡಿತ್ತು. ಆ ಪಟ್ಟಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರ ಹೆಸರು ಅರುಣ್ ಪಾಟೀಲ್ ಎಂದು ಇದ್ದಿದ್ದೇ ಈಗ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ.
ಉಂಟಾಗಿರುವ ಗೊಂದಲ ವಿಚಾರವಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಾಲಿ ಅಧ್ಯಕ್ಷ, ಶಾಸಕ ರಾಜು ಕಾಗೆ ಅವರಿಗೆ ಸ್ವತಃ ಸಿಎಂ ಅವರೇ ಸ್ಪಷ್ಟನೆಯನ್ನೇನೋ ಕೊಟ್ಟಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಹೇಳಿರುವ ರೀತಿಯಲ್ಲಿ ಇದು ನಿಜಕ್ಕೂ ಪ್ರಿಂಟ್ ಮಿಸ್ಟೇಕಾ? ಅಥವಾ AICC ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖದ ಹಿಂದೆ ಬೇರೆ ಏನಾದರೂ ರಾಜಕೀಯ ಲೆಕ್ಕಾಚಾರಗಳಿತ್ತಾ ಎಂಬ ಪ್ರಶ್ನೆ ರಾಜು ಕಾಗೆ ಬೆಂಬಲಿಗರನ್ನ ಸದ್ಯ ಕಾಡತೊಡಗಿದೆ.
