Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಟೋಲ್ ಕಂಬ ಧ್ವಂಸ!

Spread the love

ದೇವನಹಳ್ಳಿ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ರಕ್ಷಣೆಯ ನೆಪದಲ್ಲಿ ಬಂದ ಕಳ್ಳರು ಪ್ರಯಾಣಿಕರ ಫೋನ್​ಗಳನ್ನಯ ಹೊತ್ತೊಯ್ದಿರುವುದು ಅಮಾನವೀಯತೆಯ ಪರಮಾವಧಿಯಾಗಿದೆ.

ಮೂವರ ಐ ಫೋನ್ ಕದ್ದೊಯ್ದ ಕದೀಮರು

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಹಳೆ ಟೋಲ್ ಪ್ಲಾಜಾ ಬೂತ್ ಸಂಪೂರ್ಣವಾಗಿ ಧ್ವಂಸವಾಗಿದೆ. ಅಪಘಾತದ ವೇಳೆ ಟೋಲ್ ಪ್ಲಾಜಾ ಬಂದ್ ಆಗಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ. ಬೂತ್ ಬಳಿ ಯಾವುದೇ ವಾಹನಗಳು ಅಥವಾ ಜನರು ಇಲ್ಲದಿದ್ದ ಕಾರಣ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಇದೇ ವೇಳೆ ಗಾಯಾಳುಗಳ ರಕ್ಷಣೆಗೆಂದು ಬಂದವರು ಬಸ್ಸಿನಲ್ಲಿದ್ದ ಮೂರು ಜನರ ಐ ಪೋನ್ ಕದ್ದು ಪರಾರಿಯಾದ ಅಮಾನವೀಯ ಘಟನೆ ನಡೆದಿದೆ.

ಅಪಘಾತದಲ್ಲಿ ಬಸ್ ಚಾಲಕ ಹಾಗೂ ಸಹ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ ಒಳಗಡೆ ಸಿಲುಕಿದ್ದ ಇಬ್ಬರನ್ನೂ ಹೊರತೆಗೆದು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತ ಸಂಭವಿಸುತ್ತಿದ್ದಂತೆಯೇ ಪ್ರಯಾಣಿಕರು ಎಕ್ಸಿಟ್ ಡೋರ್ ಮೂಲಕ ಹೊರಬಂದಿದ್ದಾರೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ಬಳಿಕ ಕ್ರೇನ್ ಮೂಲಕ ಬಸ್ ಅನ್ನು ರಸ್ತೆಯ ಬದಿಗೆ ಎಳೆಯುವ ಕಾರ್ಯ ನಡೆಯಿತು. ಈ ಸಂಬಂಧ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದೇ ರಸ್ತೆಯಲ್ಲಿವೆ ಎರಡು ಟೋಲ್ ಬೂತ್​​ಗಳು

ಒಂದೇ ರಸ್ತೆಯಲ್ಲಿ ಕೇವಲ 500 ಮೀಟರ್ ಅಂತರದಲ್ಲಿ ಎರಡು ಟೋಲ್ ಪ್ಲಾಜಾಗಳಿರುವುದು ವಾಹನ ಸವಾರರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಎರಡು ಟೋಲ್ ಪ್ಲಾಜಾಗಳಲ್ಲಿ ಒಂದರಲ್ಲಿ ಎರಡು–ಮೂರು ವರ್ಷಗಳ ಹಿಂದೆಯೇ ಟೋಲ್ ವಸೂಲಿ ನಿಲ್ಲಿಸಲಾಗಿದೆ. ಆದರೆ ಟೋಲ್ ವಸೂಲಿ ಸ್ಥಗಿತಗೊಂಡಿದ್ದರೂ ಸಹ, ಹಳೆಯ ಟೋಲ್ ಬೂತ್‌ಗಳನ್ನು ಇನ್ನೂ ತೆರವುಗೊಳಿಸದೆ ಹಾಗೆಯೇ ಬಿಟ್ಟಿರುವುದು ಅಪಘಾತಗಳ ಅಪಾಯವನ್ನು ಹೆಚ್ಚಿಸಿದೆ. ಶಿಥಿಲಾವಸ್ಥೆಗೆ ತಲುಪಿರುವ ಟೋಲ್ ಪ್ಲಾಜಾ ಬೂತ್‌ಗಳ ಗೋಡೆಗಳು ಯಾವಾಗ ಬೇಕಾದರೂ ರಸ್ತೆ ಮೇಲೆ ಅಥವಾ ಸಂಚರಿಸುವ ವಾಹನಗಳ ಮೇಲೆ ಕುಸಿದು ಬೀಳುವ ಸ್ಥಿತಿಯಲ್ಲಿವೆ.

ಟೋಲ್ ಬೂತ್‌ಗಳ ಗೋಡೆಗಳು ಸಂಪೂರ್ಣ ಹಾಳಾಗಿದ್ದರೂ ಟೋಲ್ ಪ್ಲಾಜಾ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಹನ ಸವಾರರು ಆರೋಪಿಸುತ್ತಿದ್ದಾರೆ. ಸುರಕ್ಷತಾ ಕ್ರಮಗಳು, ಸ್ಪೀಡ್ ಬ್ರೇಕರ್‌ಗಳು ಹಾಗೂ ಎಚ್ಚರಿಕಾ ಸೂಚನಾ ಫಲಕಗಳಿಲ್ಲದ ಕಾರಣ ಹೆದ್ದಾರಿಯಲ್ಲಿ ಅತಿವೇಗದಲ್ಲಿ ವಾಹನಗಳು ಸಂಚರಿಸುತ್ತಿದ್ದು, ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವ ಈ ಪ್ರಮುಖ ಹೆದ್ದಾರಿಯಲ್ಲಿ ಟೋಲ್ ಆಡಳಿತ ಮಂಡಳಿ ಕೇವಲ ಸುಂಕ ವಸೂಲಿಯಲ್ಲೇ ನಿರತರಾಗಿದ್ದು, ಸಾರ್ವಜನಿಕ ಸುರಕ್ಷತೆಯನ್ನು ಕಡೆಗಣಿಸಿದೆ ಎಂಬ ಆರೋಪ ಕೇಳಿಬರುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *