ಪ್ರಸಿದ್ಧ ಕಾರಿಂಜೇಶ್ವರ ದೇವಸ್ಥಾನದ ಗೋಪುರಕ್ಕೆ ಬಡಿದ ಭೀಕರ ಸಿಡಿಲು; ಭಾಗಶಃ ಹಾನಿ!

ಬಂಟ್ವಾಳ: ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲು ಬಡಿದು ಗರ್ಭಗುಡಿಯ ಮೇಲಿನ ಗೋಪುರ ಭಾಗ ಹಾನಿಗೊಳಗಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಘಟನೆ ಸಂಭವಿಸಿದ ವೇಳೆಯಲ್ಲಿ ದೇವಸ್ಥಾನದಲ್ಲಿ ಯಾರೂ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಸಿಡಿಲಿನ ಆಘಾತದಿಂದ ಗರ್ಭಗುಡಿಯ ಮೇಲಿನ ಗೋಪುರದ ಕೆಲವು ಭಾಗಗಳಿಗೆ ಹಾನಿಯಾಗಿದ್ದು, ನಷ್ಟದ ಪ್ರಮಾಣ ಇನ್ನಷ್ಟೇ ಅಂದಾಜಿಸಲಾಗುತ್ತಿದೆ. ಘಟನೆ ಕುರಿತು ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ. ಅಮೀನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳೀಯ ಭಕ್ತರು ಹಾಗೂ ಗ್ರಾಮಸ್ಥರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.