ಶಿವಮೊಗ್ಗ: ರೌಡಿಶೀಟರ್ ಕುಳ್ಳಿ ಕಿರಣ್ ಕೊಲೆ ಪ್ರಕರಣ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು!

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್ ಇನ್ಸ್ಪೆಕ್ಟರ್ ಕೆ.ಟಿ ಗುರುರಾಜ್ ಗುಂಡು ಹೊಡೆದ ಘಟನೆ ಇಂದು ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಶಿವಮೊಗ್ಗದ ರಾಮೇನಕೊಪ್ಪದಲ್ಲಿ ರವಿವಾರ ಸಂಜೆ ನಡೆದ ರೌಡಿಶೀಟರ್ ಕುಳ್ಳಿ ಕಿರಣ್ (32) ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಉಮೇಶ್ ನಾಯ್ (27) ಎಡಗಾಲಿಗೆ ಗುಂಡು ಹಾರಿಸಲಾಗಿದೆ.
ಕುಳ್ಳಿ ಕಿರಣ್ ಹತ್ಯೆ ನಡೆದ ಬಳಿಕ ಪರಾರಿಯಾಗಿದ್ದ ಉಮೇಶ್ ನಾಯ್ಕನ ಪತ್ತೆಗೆ ತುಂಗಾ ನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಎನ್.ಆರ್.ಪುರ ಭಾಗದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದ ಪೊಲೀಸರು ಶಿವಮೊಗ್ಗಕ್ಕೆ ಕರೆತರುತ್ತಿದ್ದ ವೇಳೆ ಲಿಂಗಾಪುರ ಗ್ರಾಮದ ಸಮೀಪ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್ ತಮ್ಮಣ್ಣ ಅವರ ಎಡ ಭುಜಕ್ಕೆ ಚೈನ್ನಿಂದ ಹಲ್ಲೆ ನಡೆಸಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾನೆ.

ಇನ್ಸ್ಪೆಕ್ಟರ್ ಗುರುರಾಜ್ ಮೊದಲು ಎಚ್ಚರಿಕೆ ನೀಡಿದ್ದಾರೆ. ಆದರೂ ಉಮೇಶ್ ನಾಯ್ಕ ತಪ್ಪಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದ್ದರಿಂದ ಇನ್ಸ್ಪೆಕ್ಟರ್ ಗುರುರಾಜ್ ತಮ್ಮ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾರೆ. ಗುಂಡು ಉಮೇಶ್ ನಾಯ್ಕನ ಎಡಗಾಲಿಗೆ ತಗುಲಿದೆ.
ಘಟನೆಯಲ್ಲಿ ಗಾಯಗೊಂಡ ಆರೋಪಿ ಉಮೇಶ್ ನಾಯ್ಡ್ ಹಾಗೂ ಹಲ್ಲೆಗೊಳಗಾದ ಕಾನ್ಸ್ಟೇಬಲ್ ತಮ್ಮಣ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿ ಮೇಲೆ ನಡೆದ ಫೈರಿಂಗ್ಗೆ ಸಂಬಂಧಿಸಿದಂತೆ ಎಸ್ಪಿ ನಿಖಿಲ್ ಬಿ. ಮಾಧ್ಯಮಗಳಿಗೆ ಮಾಹಿತಿ ನೀಡಿದ್ದುಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ತುಂಗಾನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ಮೊದಲು ಎಚ್ಚರಿಕೆ ನೀಡಿದ್ದಾರೆ. ಆದರೂ ಉಮೇಶ್ ನಾಯ್ಕ ತಪ್ಪಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದ್ದರಿಂದ ಇನ್ಸ್ಪೆಕ್ಟರ್ ಗುರುರಾಜ್ ತಮ್ಮಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾರೆ. ಸದ್ಯ ಪ್ರಮುಖ ಆರೋಪಿ ಉಮೇಶ್ ನಾಯ್ ಪೊಲೀಸರ ವಶದಲ್ಲಿದ್ದಾನೆ. ಪ್ರಕರಣದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಹಾಗೂ ಹತ್ಯೆಗೆ ಸಂಬಂಧಿಸಿದ ಪೂರ್ಣ ಹಿನ್ನೆಲೆ ಏನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ ಎಂದರು.